ಅಗರ್ತಲ: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುತ್ತಿದ್ದ 18 ರೋಹಿಂಗ್ಯಾಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿದ್ದಾರೆ.
ಬಂಧಿತರಲ್ಲಿ ಏಳು ಮಹಿಳೆಯರು ಇದ್ದಾರೆ. ಗುರುವಾರ ಸಂಜೆ ಇವರನ್ನು ಬಂಧಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ತನಿಖೆಯ ವೇಳೆ 11 ಜನ ಬಾಂಗ್ಲಾದೇಶದ ನಿರಾಶ್ರಿತರ ಕ್ಯಾಂಪ್ನಿಂದ ಅಂತರರಾಷ್ಟ್ರೀಯ ಗಡಿರೇಖೆ ದಾಟಿದ್ದು ಗುವಾಹಟಿಗೆ ತೆರಳಲು ಬಸ್ಗೆ ಕಾಯುತ್ತಿದ್ದರು. ಈ ವೇಳೆ ಅನುಮಾನ ಬಂದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಗುವಾಹಟಿಗೆ ತೆರಳುತ್ತಿದ್ದ ಬಸ್ನಲ್ಲಿ ಗುರುತಿನ ಚೀಟಿ ಇಲ್ಲದೆ ಪ್ರಯಾಣಿಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಎಲ್ಲರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಅನಧಿಕೃತವಾಗಿ ಭಾರತಕ್ಕೆ ಪ್ರವೇಶಿಸುವವರ ಸಂಖ್ಯೆ ಹೆಚ್ಚಾದ ಕಾರಣ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಭದ್ರತಾ ಸಂಸ್ಥೆಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ಭಾರತ– ಬಾಂಗ್ಲಾದೇಶ ಗಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದರೆ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬಿಎಸ್ಎಫ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಅವರ ಕೆಲಸಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.