ಲಖನೌ: ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ ವರದಿಯಾಗಿದೆ.
ಜೌನ್ಪುರದಲ್ಲಿರುವ ಪ್ರಸಾದ್ ಎಂಜಿನಿಯರಿಂಗ್ ಕಾಲೇಜ್ ಎದುರು ಭಾನುವಾರ ನಸುಕಿನ ಜಾವ 3ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಾರಾಣಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳು ಬಿಹಾರದ ಸೀತಾಮರ್ಹಿ ಜಿಲ್ಲೆಯವರು ಎಂದು ವರದಿಯಾಗಿದೆ.
ಗೌರಾಬಾದ್ಷಹರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶವಗಳನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಟ್ರಕ್ ಅನ್ನು ವಶಕ್ಕೆ ಪಡೆದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಕಾರಿನಲ್ಲಿದ್ದವರು ಸೀತಾಮರ್ಹಿಯಿಂದ ಪ್ರಯಾಗರಾಜ್ನತ್ತ ಪ್ರಯಾಣ ಬೆಳೆಸಿದ್ದರು. ಅಜಮ್ಗಢದಿಂದ ಬರುತ್ತಿದ್ದಾಗ, ಪ್ರಸಾದ್ ಎಂಜಿನಿಯರಿಂಗ್ ಕಾಲೇಜ್ ಎದುರು ಅಪಘಾತ ಸಂಭವಿಸಿದೆ. ಮೃತರಲ್ಲಿ ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.