ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಅವರು, ಬಳಿಕ ನೇರ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ, ಪಟ್ನಾದ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ನಿತ್ಯಾನಂದ ರಾಯ್ ಅವರು ಪಟ್ನಾದ ಪಕ್ಷದ ಕಚೇರಿಗೆ ಆಗಮಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಬಣಕ್ಕೆ ಮರಳುವ ಮೂಲಕ ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
‘ಇಂಡಿಯಾ’ ಮೈತ್ರಿಕೂಟ ಛಿದ್ರಗೊಳ್ಳಲು ಕಾಂಗ್ರೆಸ್ ಕಾರಣ ಎಂದು ಜೆಡಿಯು ಆರೋಪಿಸಿತ್ತು.
ಶನಿವಾರ ಈ ಸಂಬಂಧ ಹಲವು ರಾಜಕೀಯ ಚಟುವಟಿಕೆಗಳ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿತೀಶ್ ಅವರನ್ನು ಸಂಪರ್ಕಿಸಲು ಎರಡು ಬಾರಿ ಪ್ರಯತ್ನಿಸಿದ್ದರು. ಸೋನಿಯಾ ಗಾಂಧಿ ಪ್ರಯತ್ನಕ್ಕೂ ಫಲ ಸಿಕ್ಕಿರಲಿಲ್ಲ.
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಆರ್ಜೆಡಿ 79, ಬಿಜೆಪಿ 78, ಜೆಡಿಯು 45, ಕಾಂಗ್ರೆಸ್ 19, ಸಿಪಿಎಂ((ಎಂ–ಎಲ್) 12, ಸಿಪಿಐ(ಎಂ) ಮತ್ತು ಸಿಪಿಎಂನ ತಲಾ ಇಬ್ಬರು ಶಾಸಕರಿದ್ದಾರೆ. ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಪಕ್ಷದ 4 ಮಂದಿ. ಎಐಎಂಐಎಂನ ಇಬ್ಬರು ಮತ್ತು ಒಬ್ಬ ಪಕ್ಷೇತರ ಶಾಸಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.