ನವದೆಹಲಿ: ಕರ್ನಾಟಕದ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ವ್ಯಕ್ತಿಯ ಜತೆ ರಾಹುಲ್ ಗಾಂಧಿ ಮತ್ತಿತರ ಕಾಂಗ್ರೆಸ್ನ ಹಿರಿಯ ನಾಯಕರು ಇರುವ ಫೋಟೊಗಳನ್ನು ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ‘ವಿಶ್ವಾಸಘಾತುಕತನ’ದ ಆರೋಪ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಫೆಬ್ರುವರಿ 27ರಂದು ನಡೆದ ಘಟನೆಯು ಕನ್ನಡಿಗರಿಗೆ ಮತ್ತು ಪ್ರತಿ ಭಾರತೀಯನಿಗೆ ಮಾಡಿದ ಅವಮಾನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಕರಣದ ಒಬ್ಬ ಆರೋಪಿಯು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ವಿವಿಧ ಮುಖಂಡರ ಜತೆ ಇರುವ ಫೋಟೊಗಳನ್ನು ಭಾಟಿಯಾ ಪ್ರದರ್ಶಿಸಿದರು. ಪ್ರಕರಣದ ಮತ್ತೊಬ್ಬ ಆರೋಪಿ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಇರುವ ಫೋಟೊಗಳನ್ನು ಅವರು ತೋರಿಸಿದರು.
‘ಪಾಕ್ ಪರ ಘೋಷಣೆ ಕೂಗಿದ್ದನ್ನು ಆರಂಭದಲ್ಲಿ ಕಾಂಗ್ರೆಸ್ ನಿರಾಕರಿಸಿತ್ತು ಮತ್ತು ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿತ್ತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತಮ್ಮ ಪಕ್ಷದ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಬೇಕು’ ಎಂದು ಭಾಟಿಯಾ ಒತ್ತಾಯಿಸಿದರು.
‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪ್ರಜಾಪ್ರಭುತ್ವ ಬಲಿಷ್ಠವಾಗುತ್ತಿದೆ. ಇಂಥ ಸಂದರ್ಭದಲ್ಲಿ ವಿರೋಧ ಪಕ್ಷವು ಕುಯುಕ್ತಿ ಮತ್ತು ವಿಶ್ವಾಸಘಾತುಕತನದಲ್ಲಿ ತೊಡಗಿದೆ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ’ ಎಂದು ಅವರು ಅಭಿಪ್ರಾಯ ಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.