ನವದೆಹಲಿ: ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಅಮಾನತುಗೊಂಡಿರುವ ಪಕ್ಷದ ನಾಯಕ ಶಹಜಹಾನ್ ಶೇಖ್ ಅವರನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.
‘ಒಂದೆಡೆ ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ, ಬೇಟಿ ಪಡಾವೋ’ ಎಂಬ ಸಂದೇಶವನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಮಮತಾ ದೀದಿ ಅವರು ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಿಂದ ‘ಶಾಹಜಹಾನ್ ಬಚಾವೋ’ ಎಂಬ ಸಂದೇಶವನ್ನು ನೀಡುತ್ತಿದ್ದಾರೆ’ ಎಂದು ಪೂನಾವಾಲಾ ವಾಗ್ದಾಳಿ ನಡೆಸಿದ್ದಾರೆ.
‘ಕಾಂಗ್ರೆಸ್ನವರು 'ಲಡ್ಕಿ ಹೂಂ, ಲಡ್ ಸಕ್ತಿ ಹೂಂ' ನಂತಹ ಅಭಿಯಾನಗಳನ್ನು ನಡೆಸುತ್ತಾರೆ. ಆದರೆ, ಮಹಿಳಾ ಸಬಲೀಕರಣಕ್ಕಾಗಿ ಏನನ್ನೂ ಮಾಡಿಲ್ಲ’ ಎಂದು ಅವರು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಪೂನಾವಾಲಾ, ‘ಪ್ರಚಾರ ಮತ್ತು ಘೋಷಣೆಗಳನ್ನು ಪ್ರಾರಂಭಿಸುವ ಬದಲು, ಅವರು (ಕೇಜ್ರಿವಾಲ್) ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಬೇಕು’ ಎಂದು ಹೇಳಿದ್ದಾರೆ.
‘ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಪ್ರಚಾರಗಳನ್ನು ಪ್ರಾರಂಭಿಸುತ್ತಿದ್ದಾರೆ. ಆದರೆ, ಅವರು ಇ.ಡಿ ತನಿಖೆಗೆ ಏಕೆ ಸಹಕರಿಸುತ್ತಿಲ್ಲ. ಕೇಂದ್ರೀಯ ಸಂಸ್ಥೆಗಳ ಮುಂದೆ ಹಾಜರಾಗಲು ಏಕೆ ಹಿಂಜರಿಯುತ್ತಿದ್ದಾರೆ ಎಂಬುದಕ್ಕೆ ಮೊದಲು ಉತ್ತರಿಸಬೇಕು’ ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಹಗರಣದ ಪ್ರಕರಣಗಳಲ್ಲಿ ಶಹಜಹಾನ್ ಶೇಖ್ ಪ್ರಮುಖ ಆರೋಪಿಯಾಗಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.