ಕೋಲ್ಕತ್ತ : ಟಿಎಂಸಿ ನಾಯಕ ಶಹಜಹಾನ್ ಶೇಖ್ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೊಲೀಸ್ ಠಾಣೆ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ನೇತೃತ್ವದಲ್ಲಿ ಪೊಲೀಸ್ ಠಾಣೆ ಬಳಿ ನೆರೆದ ನೂರಾರು ಕಾರ್ಯಕರ್ತರು, ಶಹಜಹಾನ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದೆ ಇರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಶಹಜಹಾನ್ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸಲು ತೆರಳಿದ್ದ ಇ.ಡಿ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ನಡೆಸಿದ್ದ ಘಟನೆ ಜನವರಿ 5 ರಂದು ನಡೆದಿತ್ತು. ಟಿಎಂಸಿ ನಾಯಕನ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂಬ ಆರೋಪ ಇದೆ.
ಸುಮಾರು ಒಂದು ಕಿ.ಮೀ ದೂರ ಮೆರವಣಿಗೆಯಲ್ಲಿ ಬಂದ ಬಿಜೆಪಿ ಕಾರ್ಯಕರ್ತರರನ್ನು ಪೊಲೀಸರು ಠಾಣೆಯ ಬಳಿ ತಡೆದರು. ಅಲ್ಲೇ ಧರಣಿ ಕುಳಿತ ಪ್ರತಿಭಟನಕಾರರು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಆ ಬಳಿಕ ಐವರು ಸದಸ್ಯರನ್ನೊಳಗೊಂಡ ಪಕ್ಷದ ನಿಯೋಗ ಪೊಲೀಸ್ ಠಾಣೆಯೊಳಗೆ ತೆರಳಿ ಮನವಿ ಸಲ್ಲಿಸಿತು.
‘ಇ.ಡಿ ಅಧಿಕಾರಿಗಳ ಮೇಲೆ ದಾಳಿ ನಡೆದು ಆರು ದಿನಗಳು ಕಳೆದಿವೆ. ಈ ಪೂರ್ವಯೋಜಿತ ದಾಳಿಯ ಸಂಚನ್ನು ಶಹಜಹಾನ್ ಅವರೇ ರೂಪಿಸಿದ್ದಾರೆ. ಅವರನ್ನು ತಕ್ಷಣವೇ ಬಂಧಿಸಬೇಕು’ ಎಂದು ಸುಕಾಂತ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.