ನವದೆಹಲಿ/ಕೋಲ್ಕತ್ತ: ದೆಹಲಿಯ 5 ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿದ್ದು, ನಾವು ಟೆರರೂಸರ್ಸ್ ಎಂಬ ಭಯೋತ್ಪಾದಕ ಗುಂಪಿಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ.
ರಾಜಭವನ ಕಟ್ಟಡದ ಒಳಗೆ ಸ್ಫೋಟಕ ಸಾಮಗ್ರಿ ಇರಿಸಿದ್ದೇವೆ. ಅಲ್ಲಿರುವ ಅನೇಕರು ಸಾಯುತ್ತಾರೆ ಎಂದು ಅವರು ಕರೆ ಮಾಡಿದ್ದಾರೆ. ಆದರೆ ಪಶ್ಚಿಮ ಬಂಗಾಳ ಪೊಲೀಸರು ಇದೊಂದು ಹುಸಿ ಕರೆ ಎಂದಿದ್ದಾರೆ. ಕರೆ ಮಾಡಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೂರ್ವ ದೆಹಲಿಯ ಮಯೂರ ವಿಹಾರದಲ್ಲಿರುವ ಮದರ್ ಮೇರಿ ಶಾಲೆ ಸೇರಿ ಐದು ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ.
ಈ ಘಟನೆ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.