ನವದೆಹಲಿ: ದೆಹಲಿ ಸರ್ಕಾರದ ವಿಚಾರದಲ್ಲಿ ಕೇಂದ್ರ ಸರ್ಕಾರ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಸಿಬಿಐ ಅನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಆರೋಪಿಸಿದ್ದಾರೆ.
ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿರುವ ದೆಹಲಿ ಸಚಿವೆ ಅತಿಶಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅಖಿಲೇಶ್ ಯಾದವ್ ಮಾತನಾಡಿದರು.
ಕೇಂದ್ರ ಸರ್ಕಾರ ದೆಹಲಿ ವಿಚಾರದಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಸಿಬಿಐ ಅನ್ನು ಬಳಸಿಕೊಂಡು ಎಎಪಿ ಪ್ರತಿಭಟನೆಯನ್ನು ಹತ್ತಿಕ್ಕಬಹುದು ಎಂದುಕೊಂಡಿದೆ ಎಂದು ಕಿಡಿಕಾರಿದ್ದಾರೆ.
ಕೇಜ್ರಿವಾಲ್ ಅವರು ಜೈಲಿನಿಂದ ಹೊರಬರುತ್ತಿರುವ ಮಾಹಿತಿ ಕೇಂದ್ರಕ್ಕೆ ಲಭಿಸಿರಬೇಕು. ಹೀಗಾಗಿಯೇ ಅವರು ಮತ್ತೆ ಅಧಿಕಾರಕ್ಕೆ ಮರುಳುವ ಮೂಲಕ ಜನರ ಮಧ್ಯೆ ಕಾಣಿಸಿಕೊಳ್ಳದಂತೆ ಯೋಜನೆಯನ್ನು ರೂಪಿಸಿ, ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಇಂದು ( ಬುಧವಾರ) ಬಂಧಿಸಿದೆ.
ದೆಹಲಿಗೆ ಹರಿಯಾಣದಿಂದ ನೀರು ಬಿಡುಗಡೆಗೆ ಒತ್ತಾಯಿಸಿ ಜೂನ್ 21ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಅತಿಶಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.