ಲಖನೌ: ಕಾನೂನು ಶಿಕ್ಷಣವನ್ನು ವಿಶ್ವವಿದ್ಯಾಲಯಗಳು ಪ್ರಾದೇಶಿಕ ಭಾಷೆಗಳಲ್ಲಿ ಬೋಧಿಸಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶನಿವಾರ ಹೇಳಿದರು.
ರಾಮ ಮನೋಹರ ಲೋಹಿಯಾ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಆರ್ಎಂಎಲ್ಎನ್ಎಲ್ಯು) ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಕೀಲರು ಹಿಂದಿಯಲ್ಲೂ ಉತ್ತಮ ರೀತಿಯಲ್ಲಿ ತಮ್ಮ ವಾದ ಮಂಡಿಸಬಹುದು ಎಂದರು.
ನ್ಯಾಯಾಧೀಶರು ಮತ್ತು ವಕೀಲರು ಇಂಗ್ಲಿಷ್ ಅನ್ನು ಅರ್ಥಮಾಡಿಕೊಳ್ಳುತ್ತಾರೆ. ಆದರೆ ಸಾಮಾನ್ಯ ಜನರಿಗೆ ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಹೀಗಾಗಿ ಇಂಗ್ಲಿಷ್ ಜತೆಗೆ ಪ್ರಾದೇಶಿಕ ಭಾಷೆಗಳಲ್ಲೂ ಆದೇಶಗಳು ಇರಬೇಕು ಎಂದು ಅವರು ತಿಳಿಸಿದರು. ನ್ಯಾಯಾಲಯದ ಹಲವು ತೀರ್ಪುಗಳು ಇಂಗ್ಲಿಷ್ನಲ್ಲಿ ಇರುವುದರಿಂದ ಅವು ಸಾಮಾನ್ಯ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.
ಇಂಗ್ಲಿಷ್ ಅರ್ಥಮಾಡಿಕೊಳ್ಳಲು ಸಾಮಾನ್ಯ ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂಬುದು 81 ಕಾಲೇಜುಗಳಲ್ಲಿ ನಡೆಸಿದ ಸಮೀಕ್ಷೆಯಿಂದ ಗೊತ್ತಾಗಿದೆ ಎಂದ ಅವರು, ಎಲ್ಎಲ್ಬಿ ಕೋರ್ಸ್ ಅನ್ನು ಹಿಂದಿ ಮಾಧ್ಯಮದ ಮೂಲಕ ನಡೆಸುವಂತೆ ಆರ್ಎಂಎಲ್ಎನ್ಎಲ್ಯುಗೆ ತಿಳಿಸಿದರು.
ಸುಪ್ರೀಂ ಕೋರ್ಟ್ನ ತೀರ್ಪುಗಳನ್ನು ವಿವಿಧ ಭಾಷೆಗಳಿಗೆ ಅನುವಾದಿಸಲಾಗುತ್ತಿದೆ. ಇದರಿಂದ ಸಾಮಾನ್ಯ ಜನರಿಗೆ ಅವುಗಳನ್ನು ತಿಳಿದುಕೊಳ್ಳಲು ನೆರವಾಗುತ್ತದೆ ಎಂದರು.
ಇಲ್ಲಿಯವರೆಗೆ 37 ಸಾವಿರ ಆದೇಶಗಳನ್ನು ಹಿಂದಿಗೆ ಅನುವಾದಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಕಾನೂನು ವಿದ್ಯಾರ್ಥಿಗಳು ಕಾರ್ಪೋರೇಟ್ ವಲಯಗಳಿಗೆ ಸೇರುವ ಬದಲು ನ್ಯಾಯಾಂಗ ಕ್ಷೇತ್ರಗಳಲ್ಲಿ ವೃತ್ತಿಜೀವನ ನಡೆಸುವಂತೆ ಸಿಜೆಐ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.