ನವದೆಹಲಿ: ನ್ಯಾಯಾಧೀಶರು ಮತ್ತು ಸಿಬ್ಬಂದಿಯ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸಲು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ಸಮಗ್ರ ಆರೈಕೆಯನ್ನು ಒದಗಿಸುವ ಅತ್ಯಾಧುನಿಕ 'ಆಯುಷ್ ಹೊಲಿಸ್ಟಿಕ್ ವೆಲ್ನೆಸ್ ಸೆಂಟರ್' ಅನ್ನು ಇಂದು (ಗುರುವಾರ) ಸುಪ್ರೀಂ ಕೋರ್ಟ್ ಆವರಣದಲ್ಲಿ ಉದ್ಘಾಟಿಸಲಾಯಿತು.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. ವೈ ಚಂದ್ರಚೂಡ್ ಅವರು ಸಹವರ್ತಿ ನ್ಯಾಯಾಧೀಶರ ಸಮ್ಮುಖದಲ್ಲಿ ಕೇಂದ್ರವನ್ನು ಉದ್ಘಾಟಿಸಿದರು.
ಇದೇ ಕೇಂದ್ರದಲ್ಲಿ ಪರಿಣಿತ ಸೇವೆಗಳನ್ನು ಒದಗಿಸುವ ಕುರಿತಾದ ತಿಳುವಳಿಕೆ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ ಮತ್ತು ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ನಡುವಿನ ಒಪ್ಪಂದಕ್ಕೆ ಸಹಿ ಹಾಕಲಾಯಿತು.
‘ನನಗೆ ಇದು ತೃಪ್ತಿದಾಯಕ ಕ್ಷಣವಾಗಿದೆ. ನಾನು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ನಾನು ಇದಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಆಯುರ್ವೇದ ಮತ್ತು ಸಮಗ್ರ ಜೀವನಶೈಲಿಯ ಪ್ರತಿಪಾದಕ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ತಮ್ಮ ಭಾಷಣದ ವೇಳೆ ಹೇಳಿದ್ದಾರೆ.
‘ನಾವು 2,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊಂದಿದ್ದೇವೆ. ನ್ಯಾಯಾಧೀಶರು ಮತ್ತು ಅವರ ಕುಟುಂಬಗಳಿಗೆ ಮಾತ್ರವಲ್ಲದೆ, ನಮ್ಮ ಸಿಬ್ಬಂದಿಗೂ ಸಮಗ್ರ ಜೀವನ ಮಾದರಿಯನ್ನು ಒದಗಿಸಬೇಕು. ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರಿಗೆ ನಾನು ತುಂಬಾ ಕೃತಜ್ಞತನಾಗಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
ಸಮಾರಂಭದಲ್ಲಿ ಕೇಂದ್ರ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಆಯುಷ್ ರಾಜ್ಯ ಖಾತೆ ಸಚಿವ ಡಾ. ಮುಂಜಪರಾ ಮಹೇಂದ್ರಭಾಯಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.