ADVERTISEMENT

ಕಾಶ್ಮೀರ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧ: ಖರ್ಗೆ​

ಪಿಟಿಐ
Published 22 ಸೆಪ್ಟೆಂಬರ್ 2024, 11:34 IST
Last Updated 22 ಸೆಪ್ಟೆಂಬರ್ 2024, 11:34 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಶ್ರಿನಗರ: ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ತಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರತಿಜ್ಞೆ ಮಾಡುತ್ತದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಕಾಂಗ್ರೆಸ್‌ ಪಕ್ಷ ನೀಡಿದ ಏಳು ಗ್ಯಾರಂಟಿ ಯೋಜನೆಗಳು ಈ ಪ್ರದೇಶದ ಜನರ ಉಜ್ವಲ ಭವಿಷ್ಯವನ್ನು ರೂಪಿಸುವ ಗುರಿಯನ್ನು ಹೊಂದಿವೆ' ಎಂದು ಹೇಳಿದ್ದಾರೆ.

ಪಕ್ಷದ (ಕಾಂಗ್ರೆಸ್‌) ಏಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಿಸುವ ವಿಡಿಯೊವನ್ನು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಗ್ಯಾರಂಟಿ ಯೋಜನೆಗಳು ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಬಲೀಕರಣ ಸಾಧಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಉಜ್ವಲ ಭವಿಷ್ಯವನ್ನು ರೂಪಿಸುತ್ತವೆ ಎಂದು ಅವರು ಹೇಳಿದ್ದಾರೆ.

ADVERTISEMENT

ಪಕ್ಷದ ಏಳು ಗ್ಯಾರಂಟಿಗಳು ಹೀಗಿವೆ..

  • ಮೊದಲನೆಯದಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವ ಸ್ಥಾನಮಾನ ಮರುಸ್ಥಾಪಿವುದಾಗಿ ಹೇಳಿದೆ.

  • ಪ್ರತಿ ಕುಟುಂಬಕ್ಕೆ ₹25 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಭರವಸೆ ನೀಡಿದೆ.

  • ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಕಾಶ್ಮೀರಿ ಪಂಡಿತರ ಪುನರ್ವಸತಿ ಯೋಜನೆಯ ಅನುಷ್ಠಾನ ಮತ್ತು ಒಬಿಸಿ ಸಮುದಾಯಕ್ಕೆ ಸಂವಿಧಾನ ಆಧಾರಿತ ಹಕ್ಕುಗಳನ್ನು ಖಾತರಿಪಡಿಸುವುದಾಗಿ ಹೇಳಿದೆ.

  • ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹3,000 ಆರ್ಥಿಕ ಸಹಾಯಧನ ಮತ್ತು ಆಹಾರ ಭದ್ರತೆಗಾಗಿ ಪ್ರತಿ ಕುಟುಂಬದ ಸದಸ್ಯರಿಗೆ 11 ಕೆ.ಜಿ ಧಾನ್ಯ ನೀಡುವುದಾಗಿದೆ ಹೇಳಿದೆ.

  • ಬೆಳೆ ವಿಮೆ ಜೊತೆಗೆ ಸೇಬುಗೆ (1 ಕೆ.ಜಿ) ₹72 ಕನಿಷ್ಠ ಬೆಂಬಲ ಬೆಲೆ (MSP) ನೀಡುವುದಾಗಿ ಘೋಷಿಸಿದೆ.

  • ಭೂರಹಿತರು, ಹಿಡುವಳಿದಾರರು ಮತ್ತು ರೈತ ಕುಟುಂಬಗಳಿಗೆ ವರ್ಷಕ್ಕೆ ₹4,000 ಆರ್ಥಿಕ ಸಹಾಯಧನ ಹಾಗೂ ಅರ್ಹ ಯುವಕರಿಗೆ ಒಂದು ವರ್ಷದವರೆಗೆ ತಿಂಗಳಿಗೆ ₹3,500 ನಿರುದ್ಯೋಗ ಭತ್ಯೆ ನೀಡುವುದಾಗಿದೆ ತಿಳಿಸಿದೆ.

  • ಅಲ್ಲದೇ ಖಾಲಿ ಇರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದೂ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.