ಗ್ಯಾಂಗ್ಟಕ್: ತೀಸ್ತಾ ನದಿ ಪ್ರವಾಹದಲ್ಲಿ ಏಳು ಯೋಧರು ಸೇರಿದಂತೆ ಕನಿಷ್ಠ 40 ಜನರು ಮೃತಪಟ್ಟಿದ್ದಾರೆ. 20 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಲಾಚೆನ್ ಮತ್ತು ಲಾಚುಂಗ್ನಲ್ಲಿ ಸುಮಾರು 3,000 ಜನರು ಸಿಲುಕಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ತೆರಳಿರುವ 3,150 ಜನರು ಸಹ ಪ್ರವಾಹದಿಂದಾಗಿ ಸಿಲುಕಿದ್ದಾರೆ. ಸೇನೆ ಮತ್ತು ವಾಯುಪಡೆ ಹೆಲಿಕಾಪ್ಟರ್ನಲ್ಲಿ ಎಲ್ಲರನ್ನೂ ಸ್ಥಳಾಂತರಿಸಲಾಗುವುದು ಎಂದು ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿಜಯ್ ಭೂಷಣ್ ಪಾಠಕ್ ಎನ್ಡಿಟಿವಿಗೆ ಹೇಳಿದ್ದಾರೆ.
ಈ ಮಧ್ಯೆ, ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಎಚ್ಚರಿಕೆ ನೀಡಿದೆ.
ಸುಮಾರು 2,413 ಜನರನ್ನು ರಕ್ಷಿಸಲಾಗಿದ್ದರೂ 143 ಜನರು ಇನ್ನೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಸಾವಿರಾರು ಜನರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಸೇನಾ ಸಿಬ್ಬಂದಿ ಮತ್ತು ನಾಗರಿಕರಿಗಾಗಿ ಸೇನೆ ಮತ್ತು ಎನ್ಡಿಆರ್ಎಫ್ ತಂಡಗಳು ಶೋಧ ಕಾರ್ಯ ಮುಂದುವರೆಸಿವೆ ಎಂದು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಹೇಳಿದರು.
ಪ್ರವಾಹದಿಂದಾಗಿ 13 ಸೇತುವೆಗಳು ನಾಶವಾಗಿವೆ. ಮಂಗನ್ ಜಿಲ್ಲೆಯೊಂದರಲ್ಲೇ ಎಂಟು ಸೇತುವೆಗಳು ಕೊಚ್ಚಿಹೋಗಿವೆ. ಶೋಧ ಕಾರ್ಯಾಚರಣೆಗೆ ಶ್ವಾನಗಳು ಮತ್ತು ವಿಶೇಷ ರೇಡಾರ್ಗಳನ್ನು ನಿಯೋಜಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.
ಸಾವಿರಾರು ಕೋಟಿ ರೂಪಾಯಿ ನಷ್ಟ:
ಪ್ರವಾಹ ಪರಿಸ್ಥಿತಿಯಿಂದ ಪ್ರಾಣ ಹಾನಿಯ ಜತೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿಗೂ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
‘ಸಾವಿರಾರು ಕೋಟಿ ರೂಪಾಯಿಗಳ ಹಾನಿ ಸಂಭವಿಸಿದೆ. ಹಾನಿಯ ಬಗ್ಗೆ ನಿಖರವಾದ ವಿವರ ನೀಡಲು ಸಾಧ್ಯವಿಲ್ಲ. ಜನರ ರಕ್ಷಣೆ ಮತ್ತು ಅವರಿಗೆ ತಕ್ಷಣದ ಪರಿಹಾರ ಒದಗಿಸುವುದು ಮೊದಲ ಆದ್ಯತೆ. ಜಿಲ್ಲೆಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ, ಸೇತುವೆಗಳು ಕೊಚ್ಚಿಹೋಗಿವೆ. ಸುಮಾರು 25 ಸಾವಿರ ಜನರು ಸಂಕಷ್ಟದಲ್ಲಿದ್ದಾರೆ’ ಎಂದರು.
ಈ ನಡುವೆ ಪ್ರವಾಹ ಪೀಡಿತ ಜನರಿಗೆ ಪರಿಹಾರ ಒದಗಿಸಲು ಸಿಕ್ಕಿಂಗೆ ರಾಜ್ಯ ವಿಪತ್ತು ಸ್ಪಂದನಾ ನಿಧಿಯ (ಎಸ್ಡಿಆರ್ಎಫ್) ಕೇಂದ್ರದ ಪಾಲಿನಿಂದ ₹ 44.8 ಕೋಟಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲು ಗೃಹ ಸಚಿವ ಅಮಿತ್ ಶಾ ಅನುಮೋದನೆ ನೀಡಿದ್ದಾರೆ.
ಶಾ ಅವರ ನಿರ್ದೇಶನದ ನಂತರ, ಗೃಹ ಸಚಿವಾಲಯ (ಎಂಎಚ್ಎ) ಅಂತರ ಸಚಿವಾಲಯದ ಕೇಂದ್ರ ತಂಡವನ್ನು (ಐಎಂಸಿಟಿ) ರಚಿಸಿದೆ. ಈ ತಂಡ ಶೀಘ್ರದಲ್ಲೇ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಹಠಾತ್ ಪ್ರವಾಹದಿಂದ ಉಂಟಾದ ಹಾನಿಯ ಮೌಲ್ಯಮಾಪನ ಮಾಡಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಪ್ರವಾಹ ಪೀಡಿತ ಸಿಕ್ಕಿಂನಲ್ಲಿ ಸಿಲುಕಿರುವ ರಾಜ್ಯದ 160 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಇಬ್ಬರು ಹಿರಿಯ ಅಧಿಕಾರಿಗಳನ್ನು ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ್ ಅಸ್ಸಾಂ ಮುಖ್ಯಮಂತ್ರಿ ಬಿಸ್ವಾ ಶರ್ಮಾ ಹೇಳಿದ್ದಾರೆ.
‘ಕಳಪೆ ಕಾಮಗಾರಿಯಿಂದ ಒಡೆದ ಅಣೆಕಟ್ಟೆ’
‘ಚುಂಗ್ತಾಂಗ್ ಅಣೆಕಟ್ಟು ಕೊಚ್ಚಿಕೊಂಡು ಹೋಗಿದೆ. ಈ ಕಾರಣ ಕೆಳ ಪ್ರದೇಶಗಳಲ್ಲಿ ಅನಾಹುತ ಸಂಭವಿಸಿದೆ. ಮೇಘ ಸ್ಫೋಟವೂ ಆಗಿದೆ. ಹ್ಲೋನಾಕ್ ಸರೋವರವೂ ಉಕ್ಕೇರಿದೆ. ಹಿಂದಿನ ಸರ್ಕಾರ ನಿರ್ಮಿಸಿದ ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಅಣೆಕಟ್ಟೆ ಒಡೆದಿದೆ ಮತ್ತು ಕೆಳಭಾಗದ ಪ್ರದೇಶಗಳಲ್ಲಿ ಪ್ರವಾಹದಿಂದ ಭಾರಿ ತೊಂದರೆ ಆಗಿದೆ’ ಎಂದು ಮುಖ್ಯಮಂತ್ರಿ ತಮಂಗ್ ಎನ್ಡಿಟಿವಿಗೆ ತಿಳಿಸಿದ್ದಾರೆ. ಮತ್ತೊಂದು ನೀರ್ಗಲ್ಲು ಸರೋವರದಲ್ಲಿ ಪ್ರವಾಹ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಪ್ರವಾಸಿಗರು ಸಿಕ್ಕಿಂಗೆ ಭೇಟಿ ನೀಡುವುದನ್ನು ಮುಂದೂಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ
ಪ್ರವಾಹದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 4 ಲಕ್ಷ ಹಾಗೂ ಕಾಳಜಿ ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ₹ 2 ಸಾವಿರ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ತಮಂಗ್ ಹೇಳಿದ್ದಾರೆ. ಕಾಳಜಿ ಕೇಂದ್ರದಲ್ಲಿ ಸಂತ್ರಸ್ತ ಕುಟುಂಬಗಳನ್ನು ಅವರು ಭೇಟಿ ಮಾಡಿದರು. ಸ್ಥಳಾಂತರಗೊಂಡ ಕುಟುಂಬಗಳ ಪುನರ್ವಸತಿಗೆ ಎಲ್ಲಾ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.