ಸುಲ್ತಾನ್ಪುರ: ಮಾನನಷ್ಟ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಜುಲೈ 26ರಂದು ಖುದ್ದಾಗಿ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ಸಂಸದರ–ಶಾಸಕರ ನ್ಯಾಯಾಲಯ ಸೂಚಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ಅವರ ವಿರುದ್ಧ 2018ರಲ್ಲಿ ಮಾನನಷ್ಟ ಪ್ರಕರಣ ದಾಖಲಾಗಿದೆ.
ಈ ಪ್ರಕರಣದ ಕುರಿತು ಮಂಗಳವಾರವೇ ರಾಹುಲ್ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಸಂಸತ್ತಿನ ಕಲಾಪದಿಂದಾಗಿ ಅವರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನ್ಯಾಯಾಲಯಕ್ಕೆ ಹಾಜರಾದ ಅವರ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ, ಈ ಪ್ರಕರಣದ ವಿಚಾರಣೆಗೆ ಮುಂದಿನ ದಿನಾಂಕ ನಿಗದಿಪಡಿಸಬೇಕು ಎಂದು ಕೋರಿದರು.
ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶ ಶುಭಮ್ ವರ್ಮಾ ಅವರು, ಜುಲೈ 26ರಂದು ರಾಹುಲ್ ಖುದ್ದಾಗಿ ಹಾಜರಾಗಬೇಕು ಎಂದು ಹೇಳಿದರು.
ಈ ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯನ್ನು ಫೆಬ್ರುವರಿ 20ರಂದು ಒಂದು ದಿನದ ಮಟ್ಟಿಗೆ ನಿಲ್ಲಿಸಿ, ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆಗ ಅವರಿಗೆ ಜಾಮೀನು ಸಿಕ್ಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.