ನವದೆಹಲಿ: ‘ನೀಟ್–ಯುಜಿ’ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಮತ್ತು ನೀಟ್ ಮರು ಪರೀಕ್ಷೆಗೆ ಆಗ್ರಹಿಸಿ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಲಖನೌ, ರಾಂಚಿ, ಚಂಡೀಗಢ, ಜೈಪುರ, ಕೋಹಿಮಾ ಸೇರಿದಂತೆ ದೇಶದ ವಿವಿಧೆಡೆ ಶುಕ್ರವಾರ ಪ್ರತಿಭಟನೆ ನಡೆಸಿದೆ.
ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದರು. ಎನ್ಟಿಎ ಮುಖ್ಯಸ್ಥರ ವಿರುದ್ಧ ಮತ್ತು ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.
ವಿವಿಧ ರಾಜ್ಯಗಳ ರಾಜಧಾನಿಗಳಲ್ಲಿ ಆಯಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗಳು ಜರುಗಿದವು. ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ವಿಷಯ ಕುರಿತು ಕಾಂಗ್ರೆಸ್ ಸಂಸತ್ತಿನಲ್ಲಿ ಧ್ವನಿಯೆತ್ತಲಿದೆ ಎಂದು ಪಕ್ಷದ ನಾಯಕರು ಹೇಳಿದರು. ವಿವಿಧೆಡೆ ಪ್ರತಿಭಟನೆ ಕೈಗೊಂಡಿದ್ದ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಮೇ 5ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಬೇಕು.
ನೀಟ್ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು.
ಪರೀಕ್ಷೆ ಬರೆದ ಅಭ್ಯರ್ಥಿಗಳು ಮತ್ತು ಪೋಷಕರ ಆತಂಕ ದೂರ ಮಾಡುವ ಹೊಣೆಯನ್ನು ಪ್ರಧಾನಿ ನಿರ್ವಹಿಸುತ್ತಿಲ್ಲ. ಅವರು ಇನ್ನೂ ಏಕೆ ಮೌನವಾಗಿದ್ದಾರೆ.
ಪರೀಕ್ಷಾ ನಿರ್ವಹಣೆಯಲ್ಲಿನ ಲೋಪದ ಹೊಣೆಯನ್ನು ಸರ್ಕಾರವೇ ಹೊರಬೇಕು. ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯವನ್ನು ರಕ್ಷಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
ಗುಜರಾತ್, ಬಿಹಾರ ಪೊಲೀಸರು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿದ್ದರೂ ಪರೀಕ್ಷಾ ಅಕ್ರಮಗಳ ಕುರಿತು ಸರ್ಕಾರ ಏಕೆ ಮೌನವಹಿಸಿದೆ.
ಶಿಕ್ಷಣವನ್ನು ರಾಜಕೀಯಗೊಳಿಸಬಾರದು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಬೇಕು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ರಾಜಕೀಯ ಮಾಡದೇ ಅಕ್ರಮ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಮಾಯಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು– ಮಾಯಾವತಿ ಅಧ್ಯಕ್ಷೆ ಬಿಎಸ್ಪಿ
ಯೋಗ ದಿನಕ್ಕೆ ಹಾಜರಾಗದ ಪ್ರಧಾನ್ ನವದೆಹಲಿ (ಪಿಟಿಐ): ದೆಹಲಿ ವಿಶ್ವವಿದ್ಯಾಲಯದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಬೇಕಿದ್ದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೆಲ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಿಂದಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ದೂರ ಉಳಿದರು. ‘ನೀಟ್– ಯುಜಿ’ ಮತ್ತು ಯುಜಿಸಿ– ನೆಟ್ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಎಡಪಂಥೀಯ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಸದಸ್ಯರು ವಿಶ್ವವಿದ್ಯಾಲಯದ ಇತರ ವಿದ್ಯಾರ್ಥಿಗಳೊಂದಿಗೆ ಕ್ಯಾಂಪಸ್ನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ 6 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿತ್ತು. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಬೇಕಿದ್ದ ಸಚಿವ ಪ್ರಧಾನ್ ಅವರು ಕೆಲ ತುರ್ತು ಕೆಲಸದ ಕಾರಣ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ದೆಹಲಿ ವಿ.ವಿ ಅಧಿಕಾರಿಗಳು ತಿಳಿಸಿದರು. ‘ಪ್ರತಿಭಟನೆಯ ಕಾರಣ ಸಚಿವರು ವಿ.ವಿಯ ಉತ್ತರ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ’ ಎಂದು ದೆಹಲಿ ವಿ.ವಿ ಎಐಎಸ್ಎ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ. ‘ಭ್ರಷ್ಟ ಮತ್ತು ದುರಹಂಕಾರಿ ಶಿಕ್ಷಣ ಸಚಿವರನ್ನು ನಮ್ಮ ವಿಶ್ವವಿದ್ಯಾಲಯಕ್ಕೆ ಸ್ವಾಗತಿಸಲು ಆಗುವುದಿಲ್ಲ. ಅವರು ಮತ್ತು ಎನ್ಟಿಎಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಆಗಿದೆ’ ಅದು ಹೇಳಿದೆ. ಪ್ರಧಾನ್ ಅವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು ಮತ್ತು ಎನ್ಟಿಎ ಅನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಆಗ್ರಹಿಸಿದರು.
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಬೇಕಿದ್ದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಕೆಲ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಿಂದಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ದೂರ ಉಳಿದರು.
‘ನೀಟ್– ಯುಜಿ’ ಮತ್ತು ಯುಜಿಸಿ– ನೆಟ್ ಅಕ್ರಮಗಳನ್ನು ವಿರೋಧಿಸಿ ಎಡಪಂಥೀಯ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್ಎ) ಸದಸ್ಯರು ವಿಶ್ವವಿದ್ಯಾಲಯದ ಇತರ ವಿದ್ಯಾರ್ಥಿಗಳೊಂದಿಗೆ ಕ್ಯಾಂಪಸ್ನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ 6 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿತ್ತು. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಬೇಕಿದ್ದ ಸಚಿವ ಪ್ರಧಾನ್ ಅವರು ಕೆಲ ತುರ್ತು ಕೆಲಸದ ಕಾರಣ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ದೆಹಲಿ ವಿ.ವಿ ಅಧಿಕಾರಿಗಳು ತಿಳಿಸಿದರು.
‘ಭ್ರಷ್ಟ ಮತ್ತು ದುರಹಂಕಾರಿ ಶಿಕ್ಷಣ ಸಚಿವರನ್ನು ನಮ್ಮ ವಿಶ್ವವಿದ್ಯಾಲಯಕ್ಕೆ ಸ್ವಾಗತಿಸಲು ಆಗುವುದಿಲ್ಲ. ಅವರು ಮತ್ತು ಎನ್ಟಿಎಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಆಗಿದೆ’ ಎಂದು ದೆಹಲಿ ವಿ.ವಿ ಎಐಎಸ್ಎ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.