ಭಾವನಗರ: ಗುಜರಾತಿನ ಭಾವನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸಾ ಕೊಠಡಿಗೆ ಪ್ರವೇಶಿಸುವ ಮುನ್ನ ಪಾದರಕ್ಷೆಗಳನ್ನು ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಹೋರ್ ನಗರದ ಶ್ರೇಯಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಸೆಪ್ಟೆಂಬರ್ 12ರಂದು ತಲೆಗೆ ಪೆಟ್ಟಾಗಿದ್ದ ಮಹಿಳೆಯನ್ನು ಆರೋಪಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯನ್ನು ಪ್ರವೇಶಿಸುವಾಗ ಪಾದರಕ್ಷೆಗಳನ್ನು ತೆಗೆಯುವಂತೆ ವೈದ್ಯರು ಹೇಳಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಗಳು ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ನಿಂದಿಸಿದ್ದಾರೆ’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಬಳಿಕ ಡಾ. ಜೈದೀಪ್ಸಿನ್ಹ್ ಗೋಹಿಲ್ ಅವರನ್ನು ಥಳಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಕೊಠಡಿಯಲ್ಲಿದ್ದ ಔಷಧಿಗಳು ಮತ್ತು ಇತರೆ ಉಪಕರಣಗಳನ್ನು ಹಾನಿಗೊಳಿಸಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳಾದ ಹಿರೇನ್ ದಂಗರ್, ಭಾವದೀಪ್ ದಂಗರ್ ಮತ್ತು ಕೌಶಿಕ್ ಕುವಾಡಿಯಾ ಎಂಬುವವರನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.