ADVERTISEMENT

ಪಶ್ಚಿಮ ಬಂಗಾಳ ರಾಜ್ಯಪಾಲ ಬೋಸ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಪಿಟಿಐ
Published 29 ಆಗಸ್ಟ್ 2024, 15:53 IST
Last Updated 29 ಆಗಸ್ಟ್ 2024, 15:53 IST
ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ –ಪಿಟಿಐ ಚಿತ್ರ
ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ –ಪಿಟಿಐ ಚಿತ್ರ   

ಕೋಲ್ಕತ್ತ: ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರನ್ನು ಗುರುವಾರ ಭೇಟಿ ಮಾಡಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ಸುಕಾಂತ ಮಜುಮ್ದಾರ್ ಅವರು ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಆಕೆಯ ಹತ್ಯೆಯ ನಂತರದಲ್ಲಿ ರಾಜ್ಯದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಕುರಿತು ಚರ್ಚಿಸಿದರು.

ಮಜುಮ್ದಾರ್ ಅವರು ಕೇಂದ್ರ ಸಚಿವ ಕೂಡ ಹೌದು. ರಾಜ್ಯದಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ಧ ಪರಿಸ್ಥಿತಿಯನ್ನು ತಿಳಿಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಮಜುಮ್ದಾರ್ ಅವರು ರಾಜ್ಯಪಾಲರನ್ನು ಒತ್ತಾಯಿಸಿದರು. ಬಿಜೆಪಿ ಮುಖಂಡರಾದ ದಿಲೀಪ್ ಘೋಷ್ ಹಾಗೂ ಇತರ ಕೆಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ಬಂಗಾಳದ ಜನರ ಹಕ್ಕುಗಳನ್ನು ರಕ್ಷಿಸುವಂತೆ, ರಾಜ್ಯವನ್ನು ವಿಪತ್ತಿನ ಈ ಪರಿಸ್ಥಿತಿಯಿಂದ ಪಾರು ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನಾವು ರಾಜ್ಯಪಾಲರನ್ನು ಕೋರಿದ್ದೇವೆ’ ಎಂದು ಮಜುಮ್ದಾರ್ ತಿಳಿಸಿದರು.

ADVERTISEMENT

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೇಳಿಕೆಗಳ ಮೂಲಕ ಅಶಾಂತಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಮಜುಮ್ದಾರ್ ಟೀಕಿಸಿದರು. ರಾಜ್ಯವೊಂದರ ಮುಖ್ಯಮಂತ್ರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸುವಲ್ಲಿ ಮಮತಾ ವಿಫಲರಾಗಿದ್ದಾರೆ ಎಂದು ದೂರಿದರು.

ಬಿಜೆಪಿಯವರು ರಾಜಭವನಕ್ಕೆ ನೀಡಿದ್ದ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ಕುನಾಲ್ ಘೋಷ್ ಅವರು, ‘ರಾಜ್ಯಪಾಲರನ್ನು ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಅವರ ವಿರುದ್ಧ ಲೈಂಗಿಕ ದುರ್ನಡತೆಯ ಆರೋಪ ಇದೆ. ಪ್ರಜಾತಾಂತ್ರಿಕವಾಗಿ ಆಯ್ಕೆಯಾಗಿರುವ ಸರ್ಕಾರವನ್ನು ತೆಗೆಯಲು ಬೇಡಿಕೆ ಇರಿಸುವ ಬದಲು, ಗಂಭೀರ ದೂರುಗಳಿದ್ದರೂ ಈ ರಾಜ್ಯಪಾಲರನ್ನು ಏಕೆ ತೆಗೆಯಬಾರದು ಎಂಬುದನ್ನು ಬಿಜೆಪಿ ನಾಯಕರು ವಿವರಿಸಬೇಕು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.