ADVERTISEMENT

ಬಂಧನ | ಆರೋಪಿಗೆ ಇ.ಡಿ ಲಿಖಿತವಾಗಿ ಕಾರಣ ತಿಳಿಸಬೇಕು: ಸುಪ್ರೀಂ ಕೋರ್ಟ್

ಕೇಂದ್ರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 22 ಮಾರ್ಚ್ 2024, 13:57 IST
Last Updated 22 ಮಾರ್ಚ್ 2024, 13:57 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಯಾವುದೇ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ ಸಂದರ್ಭದಲ್ಲಿ, ಬಂಧನಕ್ಕೆ ಕಾರಣವಾದ ಅಂಶಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಗೆ ಲಿಖಿತವಾಗಿ ತಿಳಿಸಬೇಕು. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ (ಇ.ಡಿ), ಗುರುಗ್ರಾಮ ಮೂಲದ ರಿಯಲ್‌ ಎಸ್ಟೇಟ್‌ ಸಂಸ್ಥೆ ‘ಎಂ3ಎಂ’ ಸಮೂಹದ ನಿರ್ದೇಶಕರಾದ ಬಸಂತ್ ಬನ್ಸಲ್ ಹಾಗೂ ಪಂಕಜ್‌ ಬನ್ಸಲ್‌ ಅವರನ್ನು ಬಂಧಿಸಿತ್ತು. 

ಈ ಇಬ್ಬರನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದ ಸುಪ್ರೀಂ ಕೋರ್ಟ್‌, ಇವರ ಬಂಧನಕ್ಕೆ ಸಂಬಂಧಿಸಿ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಕಳೆದ ಅಕ್ಟೋಬರ್‌ 3ರಂದು ಆದೇಶಿಸಿತ್ತು.

ADVERTISEMENT

ಅಕ್ಟೋಬರ್‌ 3ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಾತನ್ನು ಹೇಳಿರುವ ಸುಪ್ರೀಂ ಕೋರ್ಟ್‌, ತನ್ನ ತೀರ್ಪಿನಲ್ಲಿ ಯಾವುದೇ ದೋಷ ಇಲ್ಲ. ಹೀಗಾಗಿ, ಮರುಪರಿಶೀಲನೆ ಅಗತ್ಯ ಇಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಮತ್ತು ಸಂಜಯಕುಮಾರ್‌ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮಾರ್ಚ್‌ 20ರಂದು ಆದೇಶ ಪ್ರಕಟಿಸಿದೆ. 

ಅಲ್ಲದೇ, ತೆರೆದ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಸುವಂತೆ  ಕೋರಿ ಕೇಂದ್ರ ಸಲ್ಲಿಸಿದ್ದ ಮತ್ತೊಂದು ಅರ್ಜಿಯನ್ನು ಸಹ ನ್ಯಾಯಪೀಠ ವಜಾಗೊಳಿಸಿದೆ.

ಅರ್ಜಿ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯ ಕಾರ್ಯವೈಖರಿ ಕುರಿತು ಕಟು ಟೀಕೆ ಮಾಡಿದ ನ್ಯಾಯಪೀಠ, ‘ಜಾರಿ ನಿರ್ದೇಶನಾಲಯ ಪ್ರತೀಕಾರ ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸಬಾರದು. ಅತ್ಯಂತ ನ್ಯಾಯಸಮ್ಮತ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.