ತಿರುವನಂತಪುರ: ನಕಲಿ ನೇಮಕಾತಿ ಏಜೆಂಟರು ಜಾಲತಾಣಗಳಲ್ಲಿ ಸುಳ್ಳು ಜಾಹೀರಾತು ನೀಡಿ ರಾಜ್ಯದ ಯುವ ಜನರನ್ನು ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ಗೆ ಕಳ್ಳಸಾಗಣೆ ಮಾಡುತ್ತಿರುವ ಕುರಿತ ದೂರುಗಳ ಬಗ್ಗೆ ಮ್ಯಾನ್ಮಾರ್ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ತಿಳಿಸಿದರು.
ಮೋಸದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನೋರ್ಕಾ ರೂಟ್ಸ್ (ಅನಿವಾಸಿ ಕೇರಳ ವ್ಯವಹಾರಗಳ ರಾಜ್ಯ ಇಲಾಖೆ) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮ್ಯಾನ್ಮಾರ್ ಪ್ರಯಾಣದಿಂದಾಗುವ ಅಪಾಯದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಎಚ್ಚರಿಕೆ ನೀಡಿದೆ ಎಂದು ಹೇಳಿದರು.
ವಂಚಕರ ಜಾಲದಿಂದ ಮೋಸ ಹೋಗಿ, ನಂತರ ತಪ್ಪಿಸಿಕೊಂಡು ವಾಪಸ್ ಬಂದಿರುವವರು ನೀಡಿರುವ ದೂರಿನ ಆಧಾರದ ಮೇಲೆ ಕೊಲ್ಲಂ ಜಿಲ್ಲೆಯ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ರಮೇಶ್ ಚೆನ್ನಿತ್ತಲ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ, ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.