ADVERTISEMENT

ಶಿವಾಜಿ ಪ್ರತಿಮೆ ಕುಸಿತ: ಗುತ್ತಿಗೆದಾರ, ವಿನ್ಯಾಸಕನ ವಿರುದ್ಧ ಎಫ್‌ಐಆರ್‌

ಪಿಟಿಐ
Published 27 ಆಗಸ್ಟ್ 2024, 15:29 IST
Last Updated 27 ಆಗಸ್ಟ್ 2024, 15:29 IST
ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ ಕುಸಿದು ಬಿದ್ದಿದೆ –ಪಿಟಿಐ ಚಿತ್ರ
ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ ಕುಸಿದು ಬಿದ್ದಿದೆ –ಪಿಟಿಐ ಚಿತ್ರ   

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಘಟನೆ ಸಂಬಂಧ, ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿಮೆ ನಿರ್ಮಾಣದ ಗುತ್ತಿಗೆದಾರ, ವಿನ್ಯಾಸಕ ಹಾಗೂ ಕಲಾವಿದರೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಒಬ್ಬರು ಮಾಲ್ವನ್‌ ಠಾಣೆಗೆ ಈ ಸಂಬಂಧ ಸೋಮವಾರ ದೂರು ನೀಡಿದ್ದರು. ದೂರನ್ನು ಆಧರಿಸಿ ಗುತ್ತಿಗೆದಾರ ಜಯದೀಪ್‌ ಆಪ್ಟೆ ಹಾಗೂ ಪ್ರತಿಮೆಯ ವಿನ್ಯಾಸಗಾರ ಚೇತನ್‌ ಪಾಟೀಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶಿವಾಜಿ ಮಹಾರಾಜರ 35 ಅಡಿ ಎತ್ತರದ ಈ ಪ್ರತಿಮೆಯನ್ನು 2023ರ ಡಿಸೆಂಬರ್‌ 4ರಂದು(ನೌಕಾ ದಿನ) ಅನಾವರಣಗೊಳಿಸಿದ್ದರು. ಸೋಮವಾರ ಪ್ರತಿಮೆ ಕುಸಿದಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರವನ್ನು ವಿಪಕ್ಷಗಳು ಟೀಕಿಸಿದ್ದವು. ನೌಕಾಪಡೆಯು ಈ ಪ್ರತಿಮೆಯನ್ನು ನಿರ್ಮಿಸಿದ್ದಾಗಿ ಮುಖ್ಯಮಂತ್ರಿ ಶಿಂಧೆ ಪ್ರತಿಕ್ರಿಯಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.