ಹಾಥರಸ್: ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿ 121 ಜನರು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಿಲ್ಲೆಯ ಫೂಲರಾಯ್ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
ಈ ದುರಂತ ಅತ್ಯಂತ ದುರದೃಷ್ಟಕರ ಎಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ರಾಹುಲ್ ಗಾಂಧಿ ಫೂಲರಾಯ್ ಗ್ರಾಮಕ್ಕೆ ಭೇಟಿ ನೀಡಿ ಈ ಸಮಯದಲ್ಲಿ ಸಂತ್ರಸ್ತ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.
ಭೇಟಿಯ ಸಮಯ ಇನ್ನೂ ನಿಗದಿಯಾಗಿಲ್ಲ ಎಂದು ವರದಿಯಾಗಿದೆ.
ಈಗಾಗಲೇ ಈ ಘಟನೆ ಕುರಿತಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿಗಳು ಸಹ ನ್ಯಾಯಾಂಗ ತನಿಖೆ ನಡೆಸುವ ಸಮಿತಿಯಲ್ಲಿ ಇರುವರು. ಈ ದುರ್ಘಟನೆಗೆ ಕಾರಣವೇನು? ಯಾರು ಕಾರಣ ಎಂಬುದರ ಬಗ್ಗೆ ಸಮಿತಿ ಸಮಗ್ರವಾಗಿ ತನಿಖೆ ನಡೆಸಲಿದೆ ಎಂದು ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಮೃತರ ಪೈಕಿ 6 ಮಂದಿ ಹೊರ ರಾಜ್ಯದವರು. ನಾಲ್ವರು ಹರಿಯಾಣ, ತಲಾ ಒಬ್ಬರು ಮಧ್ಯಪ್ರದೇಶ ಮತ್ತು ರಾಜಸ್ಥಾನದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಸತ್ಸಂಗ ಕಾರ್ಯಕ್ರಮವನ್ನು ಸಂಘಟಿಸಿದ್ದ ಸಂಘಟಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಾರ್ಯಕ್ರಮಕ್ಕೆ 80 ಸಾವಿರ ಜನರಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಆದರೆ ಸತ್ಸಂಗದಲ್ಲಿ 2.5 ಲಕ್ಷ ಜನರು ಬಂದಿದ್ದರು. ನಿರ್ಗಮನದ ದಾರಿ ಒಂದೇ ಇದುದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.