ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಭಾರಿ ಮಳೆ ಸುರಿದಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಐದು ಜನರು ಮೃತಪಟ್ಟಿದ್ದಾರೆ.
ಮಳೆಯ ಅಬ್ಬರಕ್ಕೆ ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–1ರ ಚಾವಣಿಯ ಒಂದು ಭಾಗ
ಕುಸಿದ ಪರಿಣಾಮ, ಟ್ಯಾಕ್ಸಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ.
ರೋಹಿಣಿ ಪ್ರದೇಶದ ಪ್ರೇಮನಗರದಲ್ಲಿ 39 ವರ್ಷದ ವ್ಯಕ್ತಿಯೊಬ್ಬರು, ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಸ್ಪರ್ಶಿಸಿದ ಪರಿಣಾಮ ಮೃತಪಟ್ಟಿದ್ದಾರೆ. ನ್ಯೂ ಉಸ್ಮಾನ್ಪುರ ಪ್ರದೇಶದಲ್ಲಿ ಮಳೆ ನೀರು ನಿಂತು ಸೃಷ್ಟಿಯಾಗಿದ್ದ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈಶಾನ್ಯ ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಅಂಡರ್ಪಾಸ್ನಲ್ಲಿ ನಿಂತಿದ್ದ ಮಳೆ ನೀರಿನಲ್ಲಿ ಮುಳುಗಿ 20 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ವಸಂತ ವಿಹಾರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು, ಮೂವರು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ತಡರಾತ್ರಿ ವರೆಗೂ ಅವರ ರಕ್ಷಣಾ ಕಾರ್ಯ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.