ADVERTISEMENT

ಕೇರಳದ ಹಲವೆಡೆ ಭಾರಿ ಮಳೆ: ಇಡುಕ್ಕಿಯಲ್ಲಿ ರಾತ್ರಿ ಪ್ರಯಾಣ ನಿಷೇಧ

ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಎಚ್ಚರಿಕೆ

ಪಿಟಿಐ
Published 19 ಮೇ 2024, 11:57 IST
Last Updated 19 ಮೇ 2024, 11:57 IST
ಕೇರಳ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (ಐಎನ್‌ಸಿಒಐಎಸ್‌) ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ನಂತರ ಮೀನುಗಾರರು ತಿರುವನಂತಪುರದ ಷಣ್ಮುಗಂ ಕಡಲ ತೀರದಲ್ಲಿ ಮೀನುಗಾರಿಕೆ ದೋಣಿಗಳನ್ನು ನಿಲ್ಲಿಸಿರುವುದು ಭಾನುವಾರ ಕಂಡುಬಂತು – ಪಿಟಿಐ 
ಕೇರಳ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (ಐಎನ್‌ಸಿಒಐಎಸ್‌) ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ನಂತರ ಮೀನುಗಾರರು ತಿರುವನಂತಪುರದ ಷಣ್ಮುಗಂ ಕಡಲ ತೀರದಲ್ಲಿ ಮೀನುಗಾರಿಕೆ ದೋಣಿಗಳನ್ನು ನಿಲ್ಲಿಸಿರುವುದು ಭಾನುವಾರ ಕಂಡುಬಂತು – ಪಿಟಿಐ    

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚು ಜಾಗರೂಕವಾಗಿರುವಂತೆ ಅಧಿಕಾರಿಗಳು ಭಾನುವಾರ ಸೂಚನೆ ನೀಡಿದ್ದಾರೆ. 

ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಸೋಮವಾರವು 'ರೆಡ್ ಅಲರ್ಟ್' ಘೋಷಿಸಿದ್ದು, ತಿರುವನಂತಪುರ, ಕೊಲ್ಲಂ, ಆಲಪ್ಪುಳ ಮತ್ತು ಎರ್ನಾಕುಳಂ ಸೇರಿ ಇತರ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ತಿರುವನಂತಪುರದಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ನಗರ ಮತ್ತು ಅದರ ಉಪನಗರಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕೆಲವೆಡೆ ಮನೆ, ಅಂಗಡಿಗಳು ಜಲಾವೃತಗೊಂಡಿವೆ. 

ADVERTISEMENT

ರಾಜಧಾನಿ ಮತ್ತು ಅದರ ಉಪನಗರಗಳ ಕೆಲವು ಪ್ರದೇಶಗಳಲ್ಲಿ ಕಾಲುವೆಗಳು ಉಕ್ಕಿ ಹರಿಯುತ್ತಿವೆ. ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಹಲವೆಡೆ ಜಲಾವೃತವಾಗಿದೆ. ಮುಂಗಾರು ಪೂರ್ವದಲ್ಲಿ ಕಾಲುವೆಗಳು ಮತ್ತು ಒಳಚರಂಡಿಯನ್ನು ಸ್ವಚ್ಚಗೊಳಿಸದಿರುವುದೇ ರಾಜಧಾನಿ ಹಾಗೂ ಉಪನಗರಗಳಲ್ಲಿ ತಗ್ಗುಪ್ರದೇಶಗಳು ಜಲಾವೃತವಾಗಲು ಕಾರಣ ಎಂದು ಸ್ಥಳೀಯರು  ಆರೋಪಿಸಿದ್ದಾರೆ.

ರಾತ್ರಿ ಪ್ರಯಾಣ, ಗಣಿಗಾರಿಕೆ ನಿಷೇಧ:

ಇಡುಕ್ಕಿ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಪ್ರಯಾಣವನ್ನು ಭಾನುವಾರದಿಂದ, ರೆಡ್ ಅಲರ್ಟ್‌ ಮತ್ತು ಆರೆಂಜ್ ಅಲರ್ಟ್ ಹಿಂಪಡೆಯುವವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪವಿಭಾಗಾಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ತಹಶೀಲ್ದಾರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಎರ್ನಾಕುಳಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಸಹ ನಿಷೇಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.