ADVERTISEMENT

ಕವಿತಾ ಆರೋಪ: ಜೈಲಿನ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ ಕೋರ್ಟ್‌

ಪಿಟಿಐ
Published 29 ಮಾರ್ಚ್ 2024, 15:29 IST
Last Updated 29 ಮಾರ್ಚ್ 2024, 15:29 IST
...
...   

ನವದೆಹಲಿ: ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಇತರ ವಸ್ತುಗಳನ್ನು ನೀಡುವಂತೆ ನ್ಯಾಯಾಲಯ ನೀಡಿರುವ ಆದೇಶವನ್ನು ಜೈಲಿನ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ತಿಹಾರ್‌ ಜೈಲಿನ ಅಧಿಕಾರಿಗಳು ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರು, ‘ನನ್ನ ಆರೋಗ್ಯದ ದೃಷ್ಟಿಯಿಂದ ಮನೆಯಲ್ಲಿ ತಯಾರಿಸಿದ ಅಡುಗೆ ಮತ್ತು ಇತರ ವಸ್ತುಗಳನ್ನು ಬಳಸಲು ಅನುಮತಿ ನೀಡಬೇಕು’ ಎಂದು ಮಂಗಳವಾರ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ನಿಯಮಗಳ ಅನ್ವಯ ಕವಿತಾ ಅವರಿಗೆ ಮನೆಯಲ್ಲಿ ತಯಾರಿಸಿದ ಅಡುಗೆ, ಚಪ್ಪಲಿ, ಬಟ್ಟೆ, ಹೊದಿಕೆ, ಪುಸ್ತಕ, ಪೆನ್ನು, ಪೇಪರ್‌, ಒಡವೆ, ಔಷಧ ಮತ್ತಿತರ ವಸ್ತುಗಳನ್ನು ಬಳಸಲು ಅವಕಾಶ ನೀಡುವಂತೆ ವಿಶೇಷ ನ್ಯಾಯಾಧೀಶರು ತಿಹಾರ್‌ ಜೈಲಿನ ಅಧಿಕಾರಿಗಳಿಗೆ ಸೂಚಿಸಿದ್ದರು.

ADVERTISEMENT

ಕವಿತಾ ಅವರು ಗುರುವಾರ ಮತ್ತೆ ಹೊಸ ಅರ್ಜಿಯನ್ನು ಸಲ್ಲಿಸಿದ್ದು, ಅದರಲ್ಲಿ ‘ಜೈಲಿನ ಅಧಿಕಾರಿಗಳು ನ್ಯಾಯಲಯದ ಆದೇಶವನ್ನು ಪಾಲಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲಿನ ಅಧಿಕಾರಿಗಳಿಂದ ಉತ್ತರ ಬಯಸಿದೆ ಮತ್ತು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.