ADVERTISEMENT

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ಪಿಟಿಐ
Published 17 ಆಗಸ್ಟ್ 2024, 11:00 IST
Last Updated 17 ಆಗಸ್ಟ್ 2024, 11:00 IST
<div class="paragraphs"><p>ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ</p></div>

ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ

   

– ಪಿಟಿಐ ಚಿತ್ರ

ನವದೆಹಲಿ: ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಪ್ರಕರಣ ಖಂಡಿಸಿ ವೈದ್ಯರು ದೇಶದಾದ್ಯಂತ ಮುಷ್ಕರ ನಡೆಸಿದ್ದರಿಂದ ಶನಿವಾರ ಹಲವೆಡೆ ವೈದ್ಯಕೀಯ ಸೇವೆಯಲ್ಲಿ ಏರುಪೇರು ಉಂಟಾಗಿ ರೋಗಿಗಳು ಪರದಾಡಿದರು.

ADVERTISEMENT

ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ಒಪಿಡಿ ಸೇವೆ (ಹೊರರೋಗಿಗಳ ವಿಭಾಗ) ಸ್ಥಗಿತಗೊಳಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ್ದ ಕರೆಗೆ ದೇಶದಾದ್ಯಂತ ಉತ್ತಮ ಸ್ಪಂದನೆ ದೊರೆಯಿತು.

ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಸ್ಥಾನಿಕ ವೈದ್ಯರು ಕಳೆದ ಸೋಮವಾರದಿಂದಲೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಗಳೂ ಬೆಂಬಲ ನೀಡಿದವು.

ರಾಷ್ಟ್ರದ ರಾಜಧಾನಿಯಲ್ಲಿ ಹಲವು ಪ್ರಮುಖ ಖಾಸಗಿ ಆಸ್ಪತ್ರೆಗಳು ಮುಷ್ಕರದಲ್ಲಿ ಕೈಜೋಡಿಸಿದವು. ಸರ್‌ ಗಂಗಾ ರಾಮ್, ಫೋರ್ಟಿಸ್‌ ಮತ್ತು ಅಪೋಲೊ ಅಸ್ಪತ್ರೆಗಳಲ್ಲಿ ಒಪಿಡಿ, ಐಪಿಡಿ ಮತ್ತು ಆಯ್ದ ಕೆಲವು ಶಸ್ತ್ರಚಿಕಿತ್ಸಾ ಸೇವೆಗಳನ್ನು ನಿಲ್ಲಿಸಲಾಯಿತು.

‘ನ್ಯಾಯದಾನ ವಿಳಂಬವಾಗದಂತೆ ಸಂಬಂಧಪಟ್ಟವರ ಮೇಲೆ ಒತ್ತಡ ಹೇರಲು ಮತ್ತು ತನಿಖಾ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಪ್ರತಿಭಟನೆಗಳು ಹಾಗೂ ವೈದ್ಯರ ಮುಷ್ಕರ ಈಗ ಅಗತ್ಯವಾಗಿದೆ’ ಎಂದು ಗಂಗಾ ರಾಮ್‌ ಆಸ್ಪತ್ರೆಯ ಮುಖ್ಯಸ್ಥ ಅಜಯ್‌ ಸ್ವರೂಪ್‌ ತಿಳಿಸಿದರು.

‘ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಖಾತರಿಪಡಿಸಲು ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವವರೆಗೂ ಈ ಹೋರಾಟವನ್ನು ನಾವು ಪೂರ್ಣವಾಗಿ ಬೆಂಬಲಿಸುತ್ತೇವೆ’ ಎಂದು ಹೇಳಿದರು.

ಗುಜರಾತ್, ಪಂಜಾಬ್, ಉತ್ತರ ಪ್ರದೇಶ, ತೆಲಂಗಾಣ, ಒಡಿಶಾ ಮತ್ತು ಮಹಾರಾಷ್ಟ್ರದ ಪ್ರಮುಖ ನಗರಗಳಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ, ಛತ್ತೀಸಗಢ, ಬಿಹಾರ, ರಾಜಸ್ಥಾನ, ಜಾರ್ಖಂಡ್, ಅಸ್ಸಾಂ, ಮಿಜೊರಾಂ ಮತ್ತು ನಾಗಾಲ್ಯಾಂಡ್‌ ರಾಜ್ಯಗಳಲ್ಲೂ ಮುಷ್ಕರದಿಂದಾಗಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾದವು.

ವಿಚಾರಣೆಗೆ ಹಾಜರಾದ ಘೋಷ್
ಕೋಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಚಾರ್ಯ ಡಾ.ಸಂದೀಪ್‌ ಘೋಷ್‌ ಅವರು ಸತತ ಎರಡನೇ ದಿನವೂ ಸಿಬಿಐ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾದರು. ಶನಿವಾರ ಬೆಳಿಗ್ಗೆ 10.30ಕ್ಕೆ ಅವರು ಸಿಬಿಐ ಕಚೇರಿಗೆ ಬಂದರು. ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರವೂ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಮುಖ ಅಂಶಗಳು ‌

  • ಛತ್ತೀಸಗಢದಲ್ಲಿ 4500ಕ್ಕೂ ಅಧಿಕ ವೈದ್ಯರು ಮುಷ್ಕರದಲ್ಲಿ ಕೈಜೋಡಿಸಿದ್ದರಿಂದ ರಾಜ್ಯದಾದ್ಯಂತ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.

  • ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಖಾತರಿಪಡಿಸುವಂತೆ ಒತ್ತಾಯಿಸಿ ಪಂಜಾಬ್‌ ಮತ್ತು ಹರಿಯಾಣದಲ್ಲಿ ವೈದ್ಯರು ಹಲವೆಡೆ ಪ್ರತಿಭಟನೆ ನಡೆಸಿದರು.

  • ಗುಜರಾತ್‌ನಲ್ಲಿ ಖಾಸಗಿ ಆಸ್ಪತ್ರೆಗಳು ಒಪಿಡಿ ಸೇವೆ ಬಂದ್‌ ಮಾಡಿದವು. ಕೆಲವು ಆಸ್ಪತ್ರೆಗಳು ತುರ್ತು ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಿಲ್ಲ.

  • ಪಟ್ನಾದ ಏಮ್ಸ್‌ ಕ್ಯಾಂಪಸ್‌ನಲ್ಲಿ ಇನ್ನಷ್ಟು ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಹಾಗೂ ಹೆಚ್ಚುವರಿಯಾಗಿ 150 ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ್‌ ಕೃಷ್ಣ ಪಾಲ್‌ ತಿಳಿಸಿದರು.

ಪ್ರಧಾನಿ ಮಧ್ಯಪ್ರವೇಶಿಸಲಿ: ಐಎಂಎ
ಆರೋಗ್ಯ ಕಾರ್ಯಕರ್ತರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಆಸ್ಪತ್ರೆಗಳನ್ನು ‘ಸುರಕ್ಷಿತ ವಲಯ’ಗಳಾಗಿ ಘೋಷಿಸುವ ಸಂಬಂಧ ಕೇಂದ್ರ ಸರ್ಕಾರವು ಕಾನೂನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮನವಿ ಮಾಡಿದೆ. ‘ಆಸ್ಪತ್ರೆಗಳಲ್ಲಿನ ಭದ್ರತಾ ವ್ಯವಸ್ಥೆಯು ವಿಮಾನ ನಿಲ್ದಾಣಗಳಿಗಿಂತ ಕಡಿಮೆಯಿರಬಾರದು. ಕಡ್ಡಾಯ ಭದ್ರತಾ ಮಾನದಂಡಗಳೊಂದಿಗೆ ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳಾಗಿ ಘೋಷಿಸಬೇಕು’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.