ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಭಾರತೀಯ ಚುನಾವಣಾ ಆಯೋಗವು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯಿಂದ ಅನುರಾಗ್ ಗುಪ್ತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಿ ಆದೇಶ ಹೊರಡಿಸಿದೆ.
ಅನುರಾಗ್ ಗುಪ್ತಾ ವಿರುದ್ಧ ಹಿಂದಿನ ಚುನಾವಣೆಗಳಲ್ಲಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಹುದ್ದೆಯಿಂದ ತೆರವುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಅನುರಾಗ್ ಗುಪ್ತಾ ಅವರ ಹೊಣೆಗಾರಿಕೆಯನ್ನು ಮತ್ತೊಬ್ಬ ಹಿರಿಯ ಡಿಜಿಪಿ ಮಟ್ಟದ ಅಧಿಕಾರಿಗೆ ಹಸ್ತಾಂತರಿಸುವ ಸಲುವಾಗಿ ಅಕ್ಟೋಬರ್ 21ರೊಳಗಾಗಿ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮನವಿ ಮಾಡಿದೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮಾಡಿದ ಪಕ್ಷಪಾತದ ನಡವಳಿಕೆಯ ಆರೋಪದ ಮೇಲೆ ಗುಪ್ತಾ ಅವರನ್ನು ಜಾರ್ಖಂಡ್ ಎಡಿಜಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.
2016ರ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಹೆಚ್ಚುವರಿ ಡಿಜಿಪಿ ಆಗಿದ್ದ ಗುಪ್ತಾ ಅವರು ಅಧಿಕಾರ ದುರುಪಯೋಗದ ಗಂಭೀರ ಆರೋಪಗಳನ್ನು ಎದುರಿಸಿದ್ದರು.
ಈ ಬಾರಿಯ ಜಾರ್ಖಂಡ್ ವಿಧಾನಸಭಾ ಚುನಾವಣೆಯು ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.