ನವದೆಹಲಿ: ಹರಿಯಾಣ ಕಾಂಗ್ರೆಸ್ನ ಹಿರಿಯ ನಾಯಕರಾದ ಶಾಸಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ ಶ್ರುತಿ ಚೌಧರಿ (ಕಾರ್ಯಾಧ್ಯಕ್ಷೆ) ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬುಧವಾರ ಬಿಜೆಪಿ ಸೇರಲಿದ್ದಾರೆ.
ಅಕ್ಟೋಬರ್ನಲ್ಲಿ ವಿಧಾಸನಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಈ ಇಬ್ಬರು ನಾಯಕರು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಪಕ್ಷವನ್ನು ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರು ವೈಯಕ್ತಿಕ ದ್ವೇಷ ಸಾಧನೆಗೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಈ ನಾಯಕರು ಬಿಜೆಪಿ ಸೇರುತ್ತಿರುವುದು ಕೇಸರಿ ಪಕ್ಷಕ್ಕೆ ಹೆಚ್ಚಿನ ಬಲ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ದೀಪೇಂದರ್ ಹೂಡಾ ಅವರಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಿರಣ್ ಅವರು ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಭಿವಾನಿ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಶ್ರುತಿ ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಚೌಧರಿ ಅವರು ಕಾಂಗ್ರೆಸ್ ನಾಯಕತ್ವದೊಂದಿಗೆ ಅಸಮಾಧಾನಗೊಂಡಿದ್ದಾರೆ. ಅಲ್ಲದೆ ಹೂಡಾ ಅವರಿಂದಾಗಿ ಟಿಕೆಟ್ ಕೈತಪ್ಪಿತು ಎಂಬುದು ಅವರ ಸಿಟ್ಟಿಗೆ ಪ್ರಮುಖ ಕಾರಣ ಎಂದು ಮೂಲಗಳು ಹೇಳಿವೆ.
ಹರಿಯಾಣದಿಂದ 2022ರ ರಾಜ್ಯಸಭಾ ಚುನಾವಣೆಯಲ್ಲಿ ಸಂಖ್ಯಾಬಲವಿದ್ದರೂ ಕಾಂಗ್ರೆಸ್ನ ಅಜಯ್ ಮಾಕನ್ ಸೋತಿದ್ದರು. ಆಗ ಚಲಾವಣೆಯಾಗಿದ್ದ ಒಂದು ಅಸಿಂಧು ಮತದಿಂದ ಈ ಸೋಲಾಗಿತ್ತು. ಅದು ಕಿರಣ್ ಅವರು ಚಲಾಯಿಸಿದ ಮತವಾಗಿತ್ತು ಅಭ್ಯರ್ಥಿ ಮಾಕನ್ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.