ADVERTISEMENT

ಕೇರಳದಲ್ಲಿ ಭಾರಿ ಮಳೆ: ತುರ್ತು ಕಾರ್ಯಾಚರಣೆ ಕೇಂದ್ರಗಳ ಸ್ಥಾಪನೆ

ಪಿಟಿಐ
Published 20 ಮೇ 2024, 13:57 IST
Last Updated 20 ಮೇ 2024, 13:57 IST
ತಿರುವನಂತಪುರದಲ್ಲಿ ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದೆ –ಪಿಟಿಐ ಚಿತ್ರ
ತಿರುವನಂತಪುರದಲ್ಲಿ ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದೆ –ಪಿಟಿಐ ಚಿತ್ರ   

ತಿರುವನಂತಪುರ: ಕೇರಳದಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ.

ರಜಾದಿನಗಳನ್ನು ಕಳೆಯಲು ಬರುವ ಪ್ರವಾಸಿಗರು ಎಚ್ಚರವಹಿಸುವಂತೆ ವಿಶೇಷ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಕೆ. ರಾಜನ್‌ ತಿಳಿಸಿದ್ದಾರೆ.

ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಸಾಧ್ಯತೆ ಇರುವುದರಿಂದ ಕಠಿಣ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ADVERTISEMENT

ಭಾರಿ ಮಳೆ ಸುರಿಯುತ್ತಿರುವುದರಿಂದ ರಸ್ತೆಗಳೂ ಕುಸಿಯುವ ಸಾಧ್ಯತೆ ಇದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇಂಥ ಪ್ರದೇಶಗಳಲ್ಲಿ ಸೂಚನಾ ಫಲಕಗಳನ್ನು ಹಾಕಲಾಗಿದೆ ಎಂದು ತಿಳಿಸಿದರು.

ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಸಂಚಾರ ನಿಷೇಧಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಈ ಮಧ್ಯೆ ಭಾರಿ ಮಳೆಗೆ ಹಲವೆಡೆ ಮರಗಳು ಬುಡಮೇಲಾಗಿವೆ, ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ ಮತ್ತು ರಸ್ತೆಗಳು ಜಲಾವೃತವಾಗಿವೆ ಎಂದು ವರದಿಯಾಗಿದೆ.

ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ವೀಣಾ ಜಾರ್ಜ್‌ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.