ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಹೋಟೆಲ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಇತರ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಈ ಘಟನೆಯು ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ಬಿಜೆಪಿಯು ಲೈಂಗಿಕ ದಂಧೆಯಲ್ಲಿ ತೊಡಗಿರುವ ನಾಯಕರನ್ನು ರಕ್ಷಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಸಂದೇಶಖಾಲಿ ಘಟನೆಯಿಂದ ಜನರ ಗಮನ ಬೇರೆಡೆ ಸೆಳೆಯಲು ಆಡಳಿತ ಪಕ್ಷವು ಯತ್ನಿಸುತ್ತಿದೆ ಎಂದು ಕೇಸರಿ ಪಾಳಯ ಹೇಳಿದೆ.
ಗುರುವಾರ ಸಂಜೆ ಸಂಕ್ರೈಲ್ ಪ್ರದೇಶದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರಭದಲ್ಲಿ ಬಿಜೆಪಿ ಮುಖಂಡ ಸವ್ಯಸಾಚಿ ಘೋಷ್ ಹಾಗೂ ಇತರ 10 ಜನರಲನ್ನು ಬಂಧಿಸಿದ್ದರು. ಬಿಜೆಪಿ ನಾಯಕನ ಒಡೆತನದ ಹೋಟೆಲಿನಿಂದ ಹಲವು ಮಹಿಳೆಯರು ಹಾಗೂ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 116 ಬಳಿ ಇರುವ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ನಡೆಸಲು ಮಹಿಳೆಯರನ್ನು ಕರೆತರಲಾಗಿತ್ತು. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಘೋಷ್ ಹಾಗೂ ಇನ್ನೊಬ್ಬ ಆರೋಪಿಯನ್ನು ಏಳು ದಿನಗಳ ಪೊಲೀಸ್ ವಶಕ್ಕೆ ನ್ಯಾಯಾಲಯ ಒಪ್ಪಿಸಿದೆ ಎಂದಿದ್ದಾರೆ.
ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯ ಯುವ ಘಟಕದ ಅಧ್ಯಕ್ಷೆ ಸಯಾನಿ ಘೋಷ್, 'ಮಮತಾ ಬ್ಯಾನರ್ಜಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಹೆಚ್ಚಾಗಿ ಕೆಲಸ ಮಾಡುತ್ತಿದೆ. ಅದೇ ಬಿಜೆಪಿಯ ಹೌರಾ ಕಿಸಾನ್ ಮೋರ್ಚಾ ಕಾರ್ಯದರ್ಶಿ ಸವ್ಯಸಾಚಿ ಘೋಷ್ ಅವರನ್ನು ಸಂಕ್ರೈಲ್ನ ಹೋಟೆಲ್ನಲ್ಲಿ ಅಪ್ರಾಪ್ತ ಬಾಲಕಿಯರನ್ನು ಒಳಗೊಂಡ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಕ್ಕಾಗಿ ಬಂಧಿಸಲಾಗಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.