ADVERTISEMENT

ಆಸ್ಪತ್ರೆಗಳಲ್ಲಿ ಸುರಕ್ಷತೆ: ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:43 IST
Last Updated 4 ಸೆಪ್ಟೆಂಬರ್ 2024, 15:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವೈದ್ಯರು ಹಾಗೂ ಇತರ ಆರೋಗ್ಯಸೇವಾ ಸಿಬ್ಬಂದಿಯ ಸುರಕ್ಷತೆಗಾಗಿ ಆಸ್ಪತ್ರೆಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ವರದಿಯನ್ನು ಸೆಪ್ಟೆಂಬರ್ 10ಕ್ಕೆ ಮೊದಲು ಕಳುಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ.

ರಾಜ್ಯಗಳು ಆಸ್ಪತ್ರೆಗಳಲ್ಲಿ ಹೆಚ್ಚಿನ ಅಪಾಯ ಇರುವ ಸ್ಥಳಗಳು ಯಾವುವು ಎಂಬುದನ್ನು ಗುರುತಿಸಬೇಕು. ಜನ ಹೆಚ್ಚಾಗಿ ಬರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಕೇಂದ್ರವು ಸೂಚಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ರಾಜ್ಯಗಳ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ 11 ಅಂಶಗಳ ಸಲಹಾ ಟಿಪ್ಪಣಿಯೊಂದನ್ನು ರವಾನಿಸಿದ್ದಾರೆ. ಮೊದಲ ಸಲಹಾ ಟಿಪ್ಪಣಿಯನ್ನು ಕಳುಹಿಸಿದ ನಂತರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಅವರು ತಿಳಿಸಿದ್ದಾರೆ.

ADVERTISEMENT

ಪ್ರತಿ ಜಿಲ್ಲೆಯಲ್ಲಿ ಜನರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಆಸ್ಪತ್ರೆಗಳನ್ನು ಹೆಚ್ಚಿನ ಆದ್ಯತೆಯವು ಎಂದು ಗುರುತಿಸಬೇಕು, ಅಲ್ಲಿ ಭದ್ರತಾ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಸಲಹೆ ನೀಡಲಾಗಿದೆ. ಸ್ಥಳೀಯ ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸರ ಜೊತೆಗೂಡಿ ಭದ್ರತಾ ವ್ಯವಸ್ಥೆಯ ತಪಾಸಣೆ ನಡೆಸಬೇಕು ಎಂದು ಹೇಳಲಾಗಿದೆ.

ಭದ್ರತಾ ವ್ಯವಸ್ಥೆಯಲ್ಲಿ ಲೋಪಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗುವಲ್ಲಿ ಹೆಚ್ಚಿನ ಗಮನ ನೀಡಬೇಕು; ಅಂದರೆ, ತುರ್ತು ಚಿಕಿತ್ಸೆಯ ಕೊಠಡಿಗಳು, ತೀವ್ರ ನಿಗಾ ಘಟಕಗಳು, ಹೆರಿಗೆ ಕೋಣೆಗಳಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.