ಭೋಪಾಲ್: ಈ ಬಾರಿಯ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿಯವರ ನಿದ್ಧೆಯನ್ನು ಕಸಿದುಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಶನಿವಾರ ಹೇಳಿದ್ಧಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದೆ ಹಿಡಲು ವಿಫಲವಾಗಿದೆ. ಹೀಗಾಗಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ನಿದ್ದೆಗಳಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಮೊದಲು ಪ್ರಧಾನಿ ಮೋದಿ 18 ಗಂಟೆ ಎಚ್ಚರವಾಗಿರುತ್ತಿದ್ದರು. ಆದರೆ ಈ ಬಾರಿಯ ಚುನಾವಣೆ ಸಂದರ್ಭದಲ್ಲಿ 23 ಗಂಟೆಗಳ ಕಾಲ ನಿದ್ದೆ ಕೆಡುತ್ತಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸದ ಬಿಜೆಪಿ, ವಿರೋಧ ಪಕ್ಷಗಳ ವಿರುದ್ಧ ಬೆಟ್ಟು ಮಾಡಿ ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಎರಡು ಹಂತಗಳಲ್ಲಿ ನಡೆದಿರುವ ಚುನಾವಣೆಯಲ್ಲಿ ಬಿಜೆಪಿಗೆ ಕಡಿಮೆ ಮತದಾನವಾಗಿದೆ ಎನ್ನಲಾಗಿದೆ. ಹೀಗಾಗಿ ಅವರ 400 ಸೀಟುಗಳನ್ನು ಗಳಿಸಬೇಕೆಂಬ ಉದ್ದೇಶ ಈಡೇರುವುದು ಕಷ್ಟಸಾಧ್ಯ. ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಪವನ್ ಖೇರಾ ಹೇಳಿದ್ದಾರೆ.
ದೇಶದಲ್ಲಿ ಪ್ರತಿ ಗಂಟೆಗೆ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ನಿತ್ಯ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಗಂಟೆಗೆ 4 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಇದು ಕೇಂದ್ರ ಸರ್ಕಾರ ನೀಡಿರುವ ಅಂಕಿಅಂಶ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗುತ್ತಿರುವುದರಿಂದಲೇ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಪವನ್ ಖೇರಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.