ನಾಗ್ಪುರ: ಇಲ್ಲಿನ ಕಾರ್ಖಾನೆಯೊಂದರಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಸಂಬಂಧ ಕಾರ್ಖಾನೆಯ ನಿರ್ದೇಶಕ, ವ್ಯವಸ್ಥಾಪಕರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
'ಚಾಮುಂಡಿ ಎಕ್ಸ್ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್' ಕಾರ್ಖಾನೆ ನಿರ್ದೇಶಕ ಜಯ್ ಖೇಮ್ಖಾ ಹಾಗೂ ವ್ಯವಸ್ಥಾಪಕ ಸಾಗರ್ ದೇಶಮುಖ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ಪುರ ಸಮೀಪದ ಧಾಮ್ನಾ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ 1ರ ಸುಮಾರಿಗೆ ಸ್ಫೋಟ ಸಂಭವಿಸಿತ್ತು. ಗಾಯಗೊಂಡಿದ್ದ 9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಐವರು ಮಹಿಳೆಯರು ಮತ್ತು ಒಬ್ಬ ಪುರುಷ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಈಗಾಗಲೇ ಮಾಹಿತಿ ನೀಡಿದ್ದಾರೆ.
ಸ್ಫೋಟ ಸಂಭವಿಸಿದಾಗ, ಸಂತ್ರಸ್ತರು ಪ್ಯಾಕಿಂಗ್ ವಿಭಾಗದಲ್ಲಿದ್ದರು ಎನ್ನಲಾಗಿದೆ.
ನಿರ್ದೇಶಕ ಮತ್ತು ವ್ಯವಸ್ಥಾಪಕರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಗುರುವಾರ ರಾತ್ರಿಯೇ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಹಿಂಗ್ನಾ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.