ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದ NIA

ಪಿಟಿಐ
Published 21 ಮೇ 2024, 9:57 IST
Last Updated 21 ಮೇ 2024, 9:57 IST
ದಿ ರಾಮೇಶ್ವರಂ ಕೆಫೆ
ದಿ ರಾಮೇಶ್ವರಂ ಕೆಫೆ   

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿವಿಧ ರಾಜ್ಯಗಳಿಗೆ ಸೇರಿದ ಹಲವೆಡೆ ಮಂಗಳವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಮಾರ್ಚ್ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಈಗಾಗಲೇ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ ಲಭ್ಯವಾಗುತ್ತಿರುವ ಮಾಹಿತಿ ಆಧರಿಸಿ, ದೇಶದ ಹಲವೆಡೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.

‘ಈಗ ನಡೆದಿರುವ ದಾಳಿಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆ ಮತ್ತು ಬನಶಂಕರಿಯೂ ಸೇರಿದೆ. ಮಾರ್ಚ್‌ 3ರಂದು ಎನ್‌ಐಎ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತು. ಏ. 12ರಂದು ಅಬ್ದುಲ್ ಮಥೀನ್‌ ಅಹಮದ್ ತಾಹಾ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

‘ಸುಧಾರಿತ ಸ್ಫೋಟಕ ಸಾಧನವನ್ನು ಕೆಫೆಯಲ್ಲಿ ಇರಿಸಿದ ಮಸಾವೀರ್ ಹುಸೇನ್ ಶಾಝಿಬ್ ಹಾಗೂ ತಾಹಾ ಇಬ್ಬರನ್ನು ಕೊಲ್ಕತ್ತದ ಲಾಡ್ಜ್‌ ಒಂದರಲ್ಲಿ ವಶಕ್ಕೆ ಪಡೆಯಲಾಗಿತ್ತು. ಅಲ್ಲಿ ಅವರು ತಮ್ಮ ಗುರುತು ಮರೆಮಾಚಿಕೊಂಡು ಇದ್ದರು. ಈ ಇಬ್ಬರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಇಸ್ಲಾಮಿಕ್‌ ಸ್ಟೇಟ್‌ ಭಯೋತ್ಪಾದನಾ ಸಂಘಟನೆಗೆ ಸೇರಿದವರಾಗಿದ್ದರು’ ಎಂದು ಮಾಹಿತಿ ನೀಡಿದ್ದಾರೆ.

ಇದೇ ಗುಂಪಿಗೆ ಸೇರಿದ್ದ ಶಾರೀಖ್ ಎಂಬಾತ 2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ನಡೆದಿದ್ದ ಬಾಂಬ್ ಸ್ಫೋಟದ ರೂವಾರಿಯಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.