ನವದೆಹಲಿ: 2006ರಲ್ಲಿ ನಡೆದಿದ್ದ ‘ನಿಥಾರಿ ಸರಣಿ ಹತ್ಯೆ’ ಪ್ರಕರಣದಲ್ಲಿ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿರುವ ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ.
ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಅವರ ಪೀಠವು ಸಿಬಿಐ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸುರೇಂದ್ರ ಕೋಲಿಗೆ ಸೂಚಿಸಿದೆ.
ಆದೇಶ ಪ್ರಶ್ನಿಸಿ ಕಳೆದ ಮೇನಲ್ಲಿ ಸಂತ್ರಸ್ತರೊಬ್ಬರ ತಂದೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದ್ದ ಕೋರ್ಟ್ ಇದೀಗ ಸಿಬಿಐ ಅರ್ಜಿ ವಿಚಾರಣೆಗೂ ಸಮ್ಮತಿಸಿದೆ.
2006ರಲ್ಲಿ ಉತ್ತರ ಪ್ರದೇಶದ ನೊಯ್ಡಾದ ನಿಥಾರಿ ಪ್ರದೇಶದಲ್ಲಿ ಅನೇಕ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮೋನಿಂದರ್ ಸಿಂಗ್ ಪಂಧೇರ್ ಮತ್ತು ಸುರೇಂದ್ರ ಕೋಲಿ, ಹೆಣ್ಣುಮಕ್ಕಳನ್ನು ಮನೆಗೆ ಕರೆತಂದು ಅತ್ಯಾಚಾರವೆಸಗಿ ಹತ್ಯೆಗೈದು ಮೃತದೇಹಗಳನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.
ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.
ಪಂಧೇರ್ ಜೈಲಿನಿಂದ ಬಿಡುಗಡೆಯಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೋಲಿ ಜೈಲಿನಲ್ಲಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.