ನವದೆಹಲಿ: ಧಾರವಾಡ–ಬೆಳಗಾವಿ ರೈಲು ಮಾರ್ಗ ಅಭಿವೃದ್ಧಿಗಾಗಿ ಅಗತ್ಯವಿರುವ ಜಮೀನನ್ನು ಕರ್ನಾಟಕ ಸರ್ಕಾರ ರೈಲ್ವೆಗೆ ಹಸ್ತಾಂತರಿಸಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
‘ಬೆಳಗಾವಿಯಿಂದ ಧಾರವಾಡವರೆಗೆ 73 ಕಿ.ಮೀ. ಉದ್ದದ ರೈಲು ಮಾರ್ಗವನ್ನು 50:50 ಪಾಲುದಾರಿಕೆಯಲ್ಲಿ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ಹಾಗೂ ರೈಲ್ವೆ ಯೋಜನಾ ವೆಚ್ಚದಲ್ಲಿ ತಲಾ ಶೇ 50 ಭರಿಸಬೇಕು. ಇದಕ್ಕೆ ಅಗತ್ಯವಿರುವ ಜಮೀನಿನನ್ನು ಕರ್ನಾಟಕ ಸರ್ಕಾರ ಉಚಿತವಾಗಿ ನೀಡಬೇಕಿದೆ’ ಎಂದು ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನೆ ಕೇಳಿದ್ದರು.
ಯೋಜನೆಗೆ ಅಗತ್ಯವಿರುವ ಭೂಮಿಯ ಸ್ವಾಧೀನಪಡಿಸಿಕೊಳ್ಳುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಕೆಐಎಡಿಬಿಗೆ ವಹಿಸಿದೆ. 888 ಎಕರೆ ಒದಗಿಸುವಂತೆ ಕೆಐಎಡಿಬಿಗೆ ಬೇಡಿಕೆಯನ್ನೂ ಸಲ್ಲಿಸಲಾಗಿದೆ’ ಎಂದು ಸಚಿವ ವೈಷ್ಣವ್ ವಿವರಿಸಿದ್ದಾರೆ.
ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ಹೊಸ ರೈಲು ಮಾರ್ಗ ಕುರಿತ ಪ್ರಶ್ನೆಗೆ, ‘158 ಕಿ.ಮೀ. ಉದ್ದದ ಈ ಮಾರ್ಗಕ್ಕೆ ಸಂಬಂಧಿಸಿ ಅಂತಿಮ ಸರ್ವೆ ಹಾಗೂ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮಂಜೂರಾತಿ ನೀಡಲಾಗಿದೆ’ ಎಂದು ಉತ್ತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.