ಮುಂಬೈ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕಂಗನಾ ರನೌತ್, ದಿಟ್ಟ ಮಹಿಳೆ ಹಾಗೂ ಉತ್ತಮ ಹೋರಾಟಗಾರ್ತಿಯಾಗಿದ್ದು, ಕಠಿಣ ಪರಿಸ್ಥಿತಿಗಳಲ್ಲಿಯೂ ಆಕೆ ಮುನ್ನಡೆಯುವ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಬಿಜೆಪಿ ಸಂಸದೆ ಹಾಗೂ ನಟಿಯೂ ಆಗಿರುವ ಹೇಮಾ ಮಾಲಿನಿ ಹೇಳಿದ್ದಾರೆ.
ಬಾಲಿವುಡ್ ನಟಿ ಕಂಗನಾ ರನೌತ್ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಥ್ ಮಾಡಿರುವ ಆಕ್ಷೇಪಾರ್ಹ ಪೋಸ್ಟ್ಗೆ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಮುಂದುವರೆಯಲು ಕಂಗನಾ ರನೌತ್ ‘ಅರ್ಹ ವ್ಯಕ್ತಿ’ ಎಂದು ಹೇಮಾ ಮಾಲಿನಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
‘ಮಹಿಳೆಯಾಗಿ ಮತ್ತೊಬ್ಬ ಮಹಿಳೆ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ತಪ್ಪು’ ಎಂದು ಹೇಮಾ ಮಾಲಿನಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಕಂಗನಾ ಉತ್ತಮ ಕಲಾವಿದೆ ಎಂದು ಸಾಬೀತು ಪಡಿಸಿದ್ದಾರೆ, ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಕೆ ತುಂಬಾ ಧೈರ್ಯಶಾಲಿ ಹಾಗೂ ಮುಕ್ತವಾಗಿ ಮಾತನಾಡುತ್ತಾರೆ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.
ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಂಗನಾಗೆ ಶುಭ ಕೋರಿರುವ ಹೇಮಾ ಮಾಲಿನಿ, ಆಕೆ ಎಂತಹ ಪರಿಸ್ಥಿತಿಯನ್ನಾದರೂ ಎದುರಿಸುವ ಸಾಮರ್ಥ್ಯ ಹಾಗೂ ಧೈರ್ಯ ಹೊಂದಿದ್ದಾರೆ ಎಂದರು.
‘ಶಿಕ್ಷಕಿಯಾಗಿರಲಿ, ನಟಿಯಾಗಿರಲಿ, ಪತ್ರಕರ್ತೆಯಾಗಿರಲಿ, ರಾಜಕಾರಣಿಯಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತೆಯಾಗಿರಲಿ ಎಲ್ಲರೂ ಗೌರವಕ್ಕೆ ಅರ್ಹರು. ‘ಚೋಟಾ ಕಾಶಿ’ ಎಂದು ಪ್ರಸಿದ್ಧಿ ಪಡೆದಿರುವ ‘ಮಂಡಿ’ ಬಗ್ಗೆ ಅವಹೇಳನಕಾರಿ ಹೇಳಿಕೆಯು ನೋವುಂಟು ಮಾಡಿದೆ’ ಎಂದು ಕಂಗನಾ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.