ನವದೆಹಲಿ: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕುಗಳನ್ನು ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳು ಉಲ್ಲಂಘಿಸಿವೆ ಎಂದು ಆರೋಪಿಸಿ ಸಿಖ್ ಚೇಂಬರ್ ಆಫ್ ಕಾಮರ್ಸ್ನ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಾಷ್ಟ್ರ ರಾಜಧಾನಿ ಪ್ರವೇಶಿಸ ಬಯಸುವ ಪ್ರತಿಭಟನಾಕಾರರನ್ನು ಕೇಂದ್ರ ಮತ್ತು ಕೆಲ ರಾಜ್ಯಗಳು ಗಡಿಗಳಲ್ಲಿ ಬಲ ಪ್ರಯೋಗಿಸಿ ತಡೆದಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಕೆಲ ಪ್ರತಿಭಟನೆನಿರತರನ್ನು ಬಲವಂತವಾಗಿ ಬಂಧಿಸಲಾಗಿದೆ. ಕೆಲವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಕೆಲ ರಸ್ತೆಗಳನ್ನು ನಿರ್ಬಂಧಿಸುವ ಮೂಲಕ ಕೇಂದ್ರ ಸರ್ಕಾರವು ಅನಗತ್ಯವಾಗಿ ನಿಷೇಧಗಳನ್ನು ಹೇರುತ್ತಿದೆ ಎಂದು ತಿಳಿಸಲಾಗಿದೆ.
ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಮಧ್ಯ ಪ್ರದೇಶ ಸರ್ಕಾರಗಳ ರೈತರ ವಿರುದ್ಧ ಅಶ್ರುವಾಯು ಶೆಲ್ಗಳು, ರಬ್ಬರ್ ಗುಂಡುಗಳನ್ನು ಪ್ರಯೋಗಿಸಿ, ರೈತರನ್ನು ಗಂಭೀರವಾಗಿ ಗಾಯಗೊಳಿಸಿವೆ. ರೈತರು ತಮ್ಮ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸರ್ಕಾರಗಳು ಅನುಮತಿಸುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರನ್ನು ಸರ್ಕಾರಗಳು ಭಯೋತ್ಪಾದಕರಂತೆ ನೋಡುತ್ತಿವೆ. ಆದ್ದರಿಂದ ಈ ನಿಟ್ಟಿನಲ್ಲಿ ಕೇಂದ್ರ ಮತ್ತು ನಾಲ್ಕು ರಾಜ್ಯಗಳಿಗೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.