ಹೈದರಾಬಾದ್: ಬಿಜೆಪಿ ಪಕ್ಷದ ವಿರುದ್ಧ ಧ್ವನಿ ಎತ್ತಿದ ಕಾರಣಕ್ಕಾಗಿಯೇ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಮೀಸಲಾತಿ ಸಂಬಂಧ ಪ್ರಶ್ನಿಸಿದಕ್ಕಾಗಿಯೇ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ನನ್ನ ಮೇಲೆ ಸೇಡಿನ ಮನೋಭಾವನೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ನನ್ನ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ರೇವಂತ್ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಈ ಲೋಕಸಭಾ ಚುನಾವಣೆಯು ತೆಲಂಗಾಣದ ಹೆಮ್ಮೆ ಹಾಗೂ ಗುಜರಾತಿನ ಪ್ರಾಬಲ್ಯದ ನಡುವಣ ಪೈಪೋಟಿಯಾಗಿದೆ. ಪ್ರಧಾನಿ ಮೋದಿ ಅವರನ್ನು ಗೌರವಿಸುತ್ತೇನೆ. ಆದರೆ ಗುಜರಾತಿನಿಂದ ಬಂದು ನಮ್ಮ ನೆಲದಲ್ಲಿಯೇ ನಮಗೆ ಬೆದರಿಕೆ ಒಡ್ಡಿದರೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಂವಿಧಾನ ಬದಲಾವಣೆ ಹಾಗೂ ಮೀಸಲಾತಿ ರದ್ದುಪಡಿಸುವ ಕುರಿತು ನಿಮ್ಮ ಪಕ್ಷ ಪಡ್ಯಂತ್ರ ಮಾಡಿಲ್ಲವೇ? ಪ್ರಧಾನಿ ಮೋದಿ ಅವರೇ ನೀವು ಸುಳ್ಳು ಹೇಳುತ್ತಿದ್ದೀರಾ? ಎಂದು ರೇವಂತ್ ರೆಡ್ಡಿ ಟೀಕಿಸಿದ್ದಾರೆ.
ಮೀಸಲಾತಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ತಿರುಚಿದ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರಿಗೆ ಮೇ 1ರಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ದೆಹಲಿ ಪೊಲೀಸರು ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.