ನವದೆಹಲಿ: ತಮಿಳುನಾಡು ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅರ್ಮ್ಸ್ಟ್ರಾಂಗ್ ಅವರ ಹತ್ಯೆಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಅರ್ಮ್ಸ್ಟ್ರಾಂಗ್ ಹತ್ಯೆ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ತಮಿಳುನಾಡಿನ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಅರ್ಮ್ಸ್ಟ್ರಾಂಗ್ ಅವರ ಕ್ರೂರ ಮತ್ತು ಅಸಹ್ಯಕರ ಹತ್ಯೆ ಸುದ್ದಿ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಅವರ ಕುಟುಂಬಸ್ಥರು ಮತ್ತು ಬೆಂಬಲಗರಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
‘ಕಾಂಗ್ರೆಸ್ ನಾಯಕರು ಡಿಎಂಕೆ ನೇತೃತ್ವದ ತಮಿಳುನಾಡಿನ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಿ, ಶಿಕ್ಷೆಗೆ ಒಳಪಡಿಸುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ರಾಹುಲ್ ಹೇಳಿದ್ದಾರೆ.
ಕೆ.ಅರ್ಮ್ಸ್ಟ್ರಾಂಗ್ ಅವರನ್ನು ಶುಕ್ರವಾರ ಸಂಜೆ ಬೈಕ್ನಲ್ಲಿ ಬಂದಿದ್ದ ಆರು ಜನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರ್ಮ್ಸ್ಟ್ರಾಂಗ್ ಹತ್ಯೆ ಕುರಿತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ಬಿಜೆಪಿ ನಾಯಕರು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.