ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದ 17 ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ತೆಲಂಗಾಣ ಕಾಂಗ್ರೆಸ್ ನಾಯಕರ ಒತ್ತಡ ಹೆಚ್ಚಾಗಿದೆ. ಈ ಕುರಿತ ರಾಜ್ಯ ಕಾಂಗ್ರೆಸ್ ನಾಯಕರ ಆಶಯಗಳಿಗೆ ಕೇಂದ್ರ ನಾಯಕತ್ವ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಾತ್ವಿಕವಾಗಿ ಒಪ್ಪಿದೆ ಎಂದು ತೆಲಂಗಾಣ ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದ ಅಮೇಥಿ ಜೊತೆಗೆ ರಾಹುಲ್ ಅವರು ತೆಲಂಗಾಣದ ಖಮ್ಮಂ ಅಥವಾ ಭುವನಗಿರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯಗಳಿವೆ. ಖಮ್ಮಂ ಮತ್ತು ಭುವನಗಿರಿ ಕ್ಷೇತ್ರಗಳು ಕಾಂಗ್ರೆಸ್ನ ಭದ್ರಕೋಟೆ ಎಂದೇ ಪರಿಗಣಿಸಲಾಗುತ್ತದೆ.
ರಾಹುಲ್ ಅವರು ಪ್ರತಿನಿಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಿಪಿಐ ನಾಯಕ ಡಿ. ರಾಜಾ ಅವರ ಪತ್ನಿ ಅನ್ನಿ ರಾಜಾ ಅವರು ಸ್ಪರ್ಧಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ತೆಲಂಗಾಣ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ರಾಹುಲ್ ಸ್ಪರ್ಧಿಸುವ ನಿರೀಕ್ಷೆ ಹೊಂದಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದ 17 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ, ಬಿಆರ್ಎಸ್ 9ರಲ್ಲಿ ಮತ್ತು ಬಿಜೆಪಿ 4ರಲ್ಲಿ ಗೆದ್ದಿತ್ತು. ಎಐಎಂಐಎಂ ಕ್ಷೇತ್ರವು ಹೈದರಾಬಾದ್ ಅನ್ನು ಉಳಿಸಿಕೊಂಡಿತ್ತು.
ತೆಲಂಗಾಣದಿಂದ ಸೋನಿಯಾ ಗಾಂಧಿ ಅವರು ಸ್ಪರ್ಧಿಸಬೇಕು ಎಂದು ಈ ಹಿಂದೆ ರಾಜ್ಯ ಕಾಂಗ್ರೆಸ್ ಎರಡು ಬಾರಿ ನಿರ್ಣಯ ಅಂಗೀಕರಿಸಿ ಹೈಕಮಾಂಡ್ಗೆ ರವಾನಿಸಿತ್ತು. ಆದರೆ ಅನಾರೋಗ್ಯದ ಕಾರಣ ಸೋನಿಯಾ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದರು. ಇದರ ಬೆನ್ನಲ್ಲೇ ತೆಲಂಗಾಣ ನಾಯಕರು ರಾಜ್ಯದಿಂದಲೇ ರಾಜ್ಯಸಭೆ ಪ್ರವೇಶಿಸುವಂತೆಯೂ ಮನವಿ ಮಾಡಿದ್ದರು. ಆದರೆ ಸೋನಿಯಾ ಗಾಂಧಿ ಅವರು ಅದಕ್ಕಾಗಿ ರಾಜಸ್ಥಾನವನ್ನು ಆಯ್ಕೆ ಮಾಡಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.