ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಬಿಡುಗಡೆಗೊಳಿಸಿರುವ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾಜದಲ್ಲಿನ ಪ್ರತಿಯೊಂದು ವರ್ಗಕ್ಕೂ ಅನುಕೂಲವಾಗುವ ಮಾರ್ಗಸೂಚಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಟ್ಟಿಂಗಲ್ ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕರಾವಳಿಯನ್ನು ರಕ್ಷಿಸುವ, ಅವರ ಜೀವನೋಪಾಯವನ್ನು ಕಾಪಾಡುವ ಹಾಗೂ ಅಲ್ಲಿನ ಜನರಿಗೆ ಗೌರವಯುತ ಜೀವನವನ್ನು ಖಾತ್ರಿಪಡಿಸುವ ಭರವಸೆ ನೀಡುವ ಮೂಲಕ ಕೇರಳದ ಕರಾವಳಿ ಸಮುದಾಯವನ್ನು ನಾವು ತಲುಪಿದ್ದೇವೆ’ ಎಂದು ಹೇಳಿದ್ದಾರೆ.
ಎಲ್ಡಿಎಫ್ ಹಾಗೂ ಕಾಂಗ್ರೆಸ್ ಪಕ್ಷಗಳು ತಿರುವನಂತಪುರಂನಲ್ಲಿ ಪರಸ್ಪರ ಹೊಡೆದಾಡಿಕೊಳ್ಳುತ್ತವೆ. ಆದರೆ, ತಮಿಳುನಾಡಿನ ತಿರುನಲ್ವೇಲಿಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಎರಡು ಪಕ್ಷಗಳ ಮೈತ್ರಿಯ ವಿಶ್ವಾಸಾರ್ಹತೆ ಹಾಗೂ ನಂಬಿಕೆಯನ್ನು ಪ್ರಶ್ನಿಸಿದರು.
ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಎಡಪಕ್ಷಗಳು ನಿಷ್ಪರಿಣಾಮಕಾರಿ ಆಡಳಿತ ನಡೆಸಿದ್ದು, ರಾಜ್ಯದಲ್ಲಿ ನಡೆದ ರಾಜಕೀಯ ಹತ್ಯೆಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಾಗಿ ಕೇರಳದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ.
ಕೇರಳ ಮತ್ತು ರಾಷ್ಟ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಇವೆ. ಹೀಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಯನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.
ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.