ಜೈಪುರ: ಇಲ್ಲಿನ ದೇವಾಲಯದಲ್ಲಿ ಗುರುವಾರ ರಾತ್ರಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ (ಆರ್ಎಸ್ಎಸ್) ಸಂಘಟನೆಯ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
'ಶಾರದಾ ಪೂರ್ಣಿಮ ಅಂಗವಾಗಿ ದೇವಾಲಯದಲ್ಲಿ ಗುರುವಾರ ರಾತ್ರಿ 'ಜಾಗರಣ' ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಕ್ತರಿಗೆ ಪ್ರಸಾದ ವಿತರಣೆ ಮಾಡಿದ ನಂತರ, ಸ್ಥಳೀಯ ನಿವಾಸಿಗಳೇ ಆದ ಇಬ್ಬರು ಆರೋಪಿಗಳು ತಡರಾತ್ರಿ ಕಾರ್ಯಕ್ರಮ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಮಾತಿಗೆ ಮಾತು ಬೆಳೆದು ಜಗಳವಾಗುತ್ತಿದ್ದಂತೆ, ಆರೋಪಿಗಳು ಇನ್ನಷ್ಟು ಜನರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದರು. ಬಳಿಕ ನಡೆಸಿದ ದಾಳಿಯಲ್ಲಿ ಆರ್ಎಸ್ಎಸ್ನ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಾದ ನಸೀಬ್ ಚೌಧರಿ ಮತ್ತು ಆತನ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿ ನಡೆಸಿದ ಇನ್ನಷ್ಟು ಜನರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ. ತನಿಖೆ ಪ್ರಗತಿಯಲ್ಲಿದೆ ಎಂದೂ ಹೇಳಿದ್ದಾರೆ.
ಗಾಯಗೊಂಡವರಲ್ಲಿ ಆರು ಮಂದಿಯನ್ನು ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯನ್ನು ಖಂಡಿಸಿರುವ ಹಲವರು, ರಾತ್ರಿ ಕೆಲಹೊತ್ತು ದೆಹಲಿ–ಅಜ್ಮೀರ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.