ADVERTISEMENT

ಮೀಸಲಾತಿ ಮಿತಿ ಹೆಚ್ಚಳ: ಬಿಹಾರದ ಕ್ರಮ ರದ್ದುಗೊಳಿಸಿದ HC, ತಡೆ ನೀಡಲು SC ನಕಾರ

ಪಿಟಿಐ
Published 29 ಜುಲೈ 2024, 9:20 IST
Last Updated 29 ಜುಲೈ 2024, 9:20 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಹಿಂದುಳಿದ ವರ್ಗ, ದಲಿತರು ಹಾಗೂ ಬುಡಕಟ್ಟು ಸಮುದಾಯದವರಿಗೆ ಈಗಿರುವ ಶೇ 50ರಷ್ಟು ಮೀಸಲಾತಿಯನ್ನು ಶೇ 65ಕ್ಕೆ ಹೆಚ್ಚಿಸುವ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ್ದ ಪಟ್ನಾ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾ. ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠದ ಎದುರು ಸಲ್ಲಿಕೆಯಾದ ಸುಮಾರು 10 ಅರ್ಜಿಗಳ ವಿಚಾರಣೆ ಸೋಮವಾರ ನಡೆಯಿತು.

ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರು, ಹೈಕೋರ್ಟ್‌ ತೀರ್ಪಿಗೆ ತಡೆ ನೀಡುವಂತೆ ಪೀಠವನ್ನು ಕೋರಿದರು. ಛತ್ತೀಸಗಡದ ಇಂಥದ್ದೇ ಪ್ರಕರಣದಲ್ಲಿ ಹೈಕೋರ್ಟ್‌ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದನ್ನು ಉಲ್ಲೇಖಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ‘ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು. ಆದರೆ ತಡೆ ನೀಡಲು ಸಾಧ್ಯವಿಲ್ಲ. ಸೆಪ್ಟೆಂಬರ್‌ನಲ್ಲಿ ಅರ್ಜಿಗಳ ವಿಚಾರಣೆ ನಡೆಸಲಾಗುವುದು’ ಎಂದರು.

ರಾಜ್ಯ ಸರ್ಕಾರದ ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡ ಮಸೂದೆಗೆ ಕಳೆದ ಜೂನ್ 20ರಂದು ಪಟ್ನಾ ಹೈಕೋರ್ಟ್‌ ತಡೆ ನೀಡಿತ್ತು. ಸಂವಿಧಾನದ ಆಶಯವಾದ ಸಮಾನತೆಗೆ ವಿರುದ್ಧವಾದ ನಡೆ ಇದು ಎಂದು ಅಭಿಪ್ರಾಯಪಟ್ಟಿದ್ದ ಪೀಠ, ಸರ್ಕಾರದ ಕ್ರಮವನ್ನು ರದ್ದುಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.