ನವದೆಹಲಿ: ಪರಿಶಿಷ್ಟ ಜಾತಿಗಳ (ಎಸ್ಸಿ) ಉಪ ವರ್ಗೀಕರಣ ಮಾಡುವ ಒಳಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯಗಳಿಗೆ ಸಂವಿಧಾನಬದ್ಧ ಅಧಿಕಾರ ಇದೆ ಎಂಬುದಾಗಿ ಆಗಸ್ಟ್ 1ರಂದು ತಾನು ನೀಡಿರುವ ತೀರ್ಪಿನ ಮರುಪರಿಶೀಲನೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
‘ಈ ವಿಚಾರವಾಗಿ ತಾನು ನೀಡಿರುವ ತೀರ್ಪಿನಲ್ಲಿ ಎದ್ದುಕಾಣುವಂತಹ ಯಾವುದೇ ದೋಷ ಇಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ಸದಸ್ಯರಿರುವ ಪೀಠವು ಸ್ಪಷ್ಟಪಡಿಸಿದೆ.
‘ಸುಪ್ರೀಂ ಕೋರ್ಟ್ ನಿಯಮಗಳು–2013ರ ಅನುಸಾರ, ತೀರ್ಪನ್ನು ಮರುಪರಿಶೀಲನೆ ಮಾಡುವ ಅಗತ್ಯತೆಯನ್ನು ಪುಷ್ಟೀಕರಿಸುವ ಅಂಶಗಳು ಕಂಡುಬಂದಿಲ್ಲ. ಹೀಗಾಗಿ, ಈ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ’ ಎಂದು ಪೀಠ ಹೇಳಿದೆ.
ಈ ವಿಷಯದ ಕುರಿತು ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂಬ ಕೋರಿಕೆ ಇದ್ದ ಅರ್ಜಿಯನ್ನೂ ಪೀಠವು ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ವಿಕ್ರಮನಾಥ್, ಬೇಲಾ ಎಂ.ತ್ರಿವೇದಿ, ಪಂಕಜ್ ಮಿತ್ತಲ್, ಮನೋಜ್ ಮಿಶ್ರಾ ಹಾಗೂ ಸತೀಶ್ಚಂದ್ರ ಶರ್ಮಾ ಪೀಠದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.