ನವದೆಹಲಿ: ‘ನೀಟ್–ಯುಜಿ’ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್ಟಿಎ) ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.
ಹಿತೇನ್ ಸಿಂಗ್ ಕಶ್ಯಪ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ರಜಾಕಾಲದ ಪೀಠವು, ಈ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಬಿಹಾರ ಸರ್ಕಾರಕ್ಕೂ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ರಾಜಸ್ಥಾನದ ಕೋಟಾದಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಕೀಲರೊಬ್ಬರು ಈ ವೇಳೆ ವಾದಿಸಿದಾಗ, ಅಂತಹ ಘಟನೆಗಳು ನೀಟ್–ಯುಜಿ ಫಲಿತಾಂಶಗಳಿಗೆ ಸಂಬಂಧಿಸಿಲ್ಲ. ಆದ್ದರಿಂದ ಅನಗತ್ಯವಾಗಿ ಭಾವನಾತ್ಮಕ ವಾದಗಳನ್ನು ಮಾಡಬೇಡಿ ಎಂದು ಪೀಠ ತಾಕೀತು ಮಾಡಿತು.
ಅರ್ಜಿದಾರರ ಪರ ವಕೀಲರು ಸಿಬಿಐ ತನಿಖೆಗೆ ಒತ್ತಾಯಿಸಿದಾಗ, ಆ ಕುರಿತು ಏಕ ಪಕ್ಷೀಯವಾಗಿ ಆದೇಶಿಸಲು ಸಾಧ್ಯವಿಲ್ಲ ಎಂದ ಪೀಠ, ಕೇಂದ್ರ ಮತ್ತು ಎನ್ಟಿಎ ಪ್ರತಿಕ್ರಿಯೆ ಸಲ್ಲಿಸಿದ ಬಳಿಕ ಪರಿಶೀಲಿಸಲಾಗುವುದು ಎಂದು ತಿಳಿಸಿತು.
ಇದು ಸುಮಾರು 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ಮತ್ತೊಬ್ಬ ವಕೀಲರು ವಾದಿಸಿದಾಗ, ಆ ಕುರಿತು ತಮಗೆ ಅರಿವಿದೆ ಎಂದು ಪೀಠ ಹೇಳಿತು. ಅಲ್ಲದೆ ನೀಟ್–ಯುಜಿ ಕುರಿತು ಬಾಕಿ ಉಳಿದಿರುವ ಇತರ ಅರ್ಜಿಗಳೊಂದಿಗೆ ಈ ಪಿಐಎಲ್ ಅನ್ನೂ ಜುಲೈ 8ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದಿತು.
ಬಿಹಾರ ಮತ್ತು ಇತರ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಪರೀಕ್ಷಾ ಅಕ್ರಮಗಳು ನಡೆದಿರುವ ಕುರಿತ ಆರೋಪಗಳು ಕೇಳಿ ಬಂದಿದ್ದವು.
‘ನೀಟ್–ಯುಜಿ’ ಕುರಿತು ವಿವಿಧ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದನ್ನು ಆಧರಿಸಿ ಪೀಠವು ಇತರ ಅರ್ಜಿದಾರರಿಗೆ ನೋಟಿಸ್ ಜಾರಿಗೊಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ, ಇತರ ಪರೀಕ್ಷಾ ಅಕ್ರಮಗಳ ಕಾರಣ 2024ರ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂಬ ಕೋರಿಕೆಯ ಹಲವು ಅರ್ಜಿಗಳು ವಿವಿಧ ಹೈಕೋರ್ಟ್ಗಳಲ್ಲಿ ಬಾಕಿ ಇವೆ. ಅವುಗಳನ್ನೆಲ್ಲ ಸುಪ್ರೀಂ ಕೋರ್ಟ್ಗೆ ವರ್ಗಾಯಿಸುವಂತೆ ಎನ್ಟಿಎ ಅರ್ಜಿಯಲ್ಲಿ ಕೋರಿದೆ.
ಈ ಕುರಿತು ದೆಹಲಿ, ಕಲ್ಕತ್ತ, ಛತ್ತೀಸಗಢ ಮತ್ತು ಇತರ ಹೈಕೋರ್ಟ್ಗಳಲ್ಲಿ ಅರ್ಜಿ ಸಲ್ಲಿಸಿದವರಿಗೆ ನೋಟಿಸ್ ಜಾರಿಗೊಳಿಸಿದ ಪೀಠವು, ಜುಲೈ 8ರಂದು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದೆ.
ಜುಲೈ 6ರಿಂದ ಪ್ರಾರಂಭವಾಗುವ ಕೌನ್ಸೆಲಿಂಗ್ ಅನ್ನು ಅಮಾನತುಗೊಳಿಸಲು ನಿರ್ದೇಶಿಸಬೇಕು ಎಂದು ವಕೀಲರೊಬ್ಬರು ಕೋರಿದರು. ಆ ಮನವಿಯನ್ನು ಪೀಠ ತಿರಸ್ಕರಿಸಿತ್ತು. ಈ ಹಿಂದೆಯೂ ಇಂತಹ ಮನವಿಯನ್ನು ನ್ಯಾಯಾಲಯ ತಿರಿಸ್ಕರಿಸಿತ್ತು.
ಮೇ 5ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಪರೀಕ್ಷಾ ಸಮಯ ನಷ್ಟವಾದ 1,563 ಅಭ್ಯರ್ಥಿಗಳಿಗೆ ನೀಡಲಾಗಿದ್ದ ಕೃಪಾಂಕವನ್ನು ಹಿಂಪಡೆಯುವುದಾಗಿ ಮತ್ತು ಆ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.