ADVERTISEMENT

ನ್ಯಾಯಾಂಗ ವೇತನ ಆಯೋಗದ ಶಿಫಾರಸು ಜಾರಿ ವಿಳಂಬ: 16 ರಾಜ್ಯಗಳಿಗೆ ಸಮನ್ಸ್

ಪಿಟಿಐ
Published 11 ಜುಲೈ 2024, 15:13 IST
Last Updated 11 ಜುಲೈ 2024, 15:13 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ನ್ಯಾಯಾಂಗ ಅಧಿಕಾರಿಗಳಿಗೆ ಪಿಂಚಣಿ, ನಿವೃತ್ತಿ ಸೌಲಭ್ಯಗಳ ಸಂಬಂಧ 2ನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸದ ಸಂಬಂಧ 16 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್‌ ಜಾರಿ ಮಾಡಿದೆ.

ಶಿಫಾರಸುಗಳ ಜಾರಿಗೆ ನಿರಾಸಕ್ತಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ಶಿಫಾರಸು ಮಾಡಿರುವ ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎಂಬುದು ನಮಗೆ ಗೊತ್ತಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ, ಮನೋಜ್ ಮಿಶ್ರಾ ಅವರಿದ್ದ ಪೀಠವು, ‘ನಾವು ಅವರನ್ನು (ಅಧಿಕಾರಿಗಳು) ಜೈಲಿಗೆ ಕಳುಹಿಸುತ್ತಿಲ್ಲ. ಅವರು ವ್ಯಕ್ತಿಗತವಾಗಿ ಹಾಜರಿದ್ದು ಪ್ರಮಾಣಪತ್ರ ಸಲ್ಲಿಸಲಿ. ರಾಜ್ಯಗಳಿಗೆ ಏಳು ಅವಕಾಶಗಳನ್ನು ನೀಡಲಾಗಿದ್ದರೂ, ಹಲವು ರಾಜ್ಯಗಳು ಶಿಫಾರಸುಗಳನ್ನು ಜಾರಿಗೊಳಿಸಿಲ್ಲ’ ಎಂದು ಪೀಠ ಹೇಳಿತು.

ADVERTISEMENT

ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ, ದೆಹಲಿ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ, ಹಿಮಾಚಲ ಪ್ರದೇಶ, ಕೇರಳ, ಮೇಘಾಲಯ, ಮಧ್ಯಪ್ರದೇಶ, ತಮಿಳುನಾಡು, ಮಣಿಪುರ, ಒಡಿಶಾ, ರಾಜಸ್ಥಾನದ ರಾಜ್ಯಗಳ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ವ್ಯಕ್ತಿಗತವಾಗಿ ಆಗಸ್ಟ್‌ 23ರಂದು ಹಾಜರಾಗಬೇಕಾಗಿದೆ. ವಿಫಲವಾದಲ್ಲಿ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಪೀಠ ಎಚ್ಚರಿಸಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.