ಮುಂಬೈ (ಪಿಟಿಐ): ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸೇರಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಶಿವಸೇನಾ ಮತ್ತು ಬಿಜೆಪಿ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ದೇವೇಂದ್ರ ಪಢವೀಸ್ ಅವರೊಂದಿಗೆ ಭಾನುವಾರ ರಾತ್ರಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಶಿಂದೆ ಟ್ವಿಟರ್ನಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ.
‘ಗೃಹ ಸಚಿವರ ಭೇಟಿಯ ವೇಳೆ ಮುಂಬರುವ ಸ್ಥಳೀಯ ಸಂಸ್ಥೆಗಳು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲು ಚರ್ಚೆ ನಡೆಸಿದೆವು. ಮುಂದಿನ ಎಲ್ಲ ಚುನಾವಣೆಗಳಲ್ಲಿ ಶಿವಸೇನಾ ಮತ್ತು ಬಿಜೆಪಿ ಒಟ್ಟಾಗಿ ಸ್ಪರ್ಧಿಸಲಿವೆ ಮತ್ತು ಬಹುಮತ ಪಡೆಯಲಿವೆ’ ಎಂದು ಶಿಂದೆ ಹೇಳಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾದ ಚಿತ್ರವನ್ನೂ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
‘ಕೃಷಿ ಮತ್ತು ಸಹಕಾರ ವಲಯ ಸಂಬಂಧಿತ ವಿಷಯಗಳ ಕುರಿತು ಸಚಿವ ಶಾ ಅವರೊಂದಿಗೆ ಚರ್ಚಿಸಲಾಯಿತು. ರಾಜ್ಯದಲ್ಲಿ ನನೆಗುದಿಗೆ ಬಿದ್ದಿದ್ದ ಹಲವು ಯೋಜನೆಗಳಿಗೆ ಈಗ ಚುರುಕು ನೀಡಲಾಗಿದ್ದು, ಅವು ಪೂರ್ಣಗೊಳ್ಳುವ ಹಂತದಲ್ಲಿವೆ. ವಿವಿಧ ಯೋಜನೆಗಳಿಗೆ ನಾವು ಸದಾ ಪ್ರಧಾನಿ ಅವರ ಮಾರ್ಗದರ್ಶನವನ್ನು ಪಡೆಯುತ್ತಿದ್ದೇವೆ’ ಎಂದು ಶಿಂದೆ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.