ಬಲರಾಂಪುರ (ಉತ್ತರ ಪ್ರದೇಶ): ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಸಹೋದರಿಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲು ಬಂಕಟ್ ಗ್ರಾಮದ ನಿವಾಸಿ ರಾಜು ಅವರ ಪುತ್ರಿಯರಾದ ರೇಷ್ಮಾ (13), ಅಫ್ಸಾನಾ (11), ಗುಡ್ಡಿ (9) ಮತ್ತು ಲಲ್ಲಿ (7) ಸಾವಿಗೀಡಾದವರು. ಬಕ್ರೀದ್ ಆಚರಣೆಗಾಗಿ ರೆಹ್ರಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ತಾಯಿಯ ಚಿಕ್ಕಪ್ಪನ ಮನೆಗೆ ಮಕ್ಕಳು ಹೋಗಿದ್ದರು. ಸಂಜೆ ಸ್ನಾನ ಮಾಡಲು ಕುವಾನೋ ನದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ಹೇಳಿದ್ದಾರೆ.
ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನೀರಿನಲ್ಲಿ ಮಕ್ಕಳು ಮುಳುಗಿದ್ದಾರೆ. ಅವರ ಕಿರುಚಾಟ ಕೇಳಿ ಗ್ರಾಮಸ್ಥರು ಅವರನ್ನು ರಕ್ಷಿಸಲು ಧಾವಿಸಿದ್ದಾರೆ. ಆದರೆ ರಕ್ಷಿಸಲು ಸಾಧ್ಯವಾಗಿಲ್ಲ. ನಾಲ್ವರು ಸಹೋದರಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.