ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಸಂಭವಿಸಿದ ದುರಂತದಲ್ಲಿ 53 ಜನರು ಮೃತಪಟ್ಟಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಣ್ಣಾಮಲೈ ನೇತೃತ್ವದ ಬಿಜೆಪಿ ನಿಯೋಗ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ’ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಕಲಿ ಮಧ್ಯ ಸೇವನೆ ದುರಂತದಲ್ಲಿ ಸುಮಾರು 53 ಜೀವಗಳು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಸಂಪುಟದಿಂದ ಅಬಕಾರಿ ಖಾತೆ ಸಚಿವ ಎಸ್. ಮುತ್ತುಸ್ವಾಮಿ ಅವರನ್ನು ಕೈಬಿಡುವಂತೆ ಮುಖ್ಯಮಂತ್ರಿ ಎಂ.ಕೆ ಸ್ವಾಲಿನ್ರನ್ನು ಒತ್ತಾಯಿಸಿದ್ದಾರೆ.
ನಕಲಿ ಮದ್ಯ, ಅಕ್ರಮ ಗಾಂಜಾದ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಕುರಿತು ಸರ್ಕಾರ ಗಮನಹರಿಸುತ್ತಿಲ್ಲ ಎಂದು ಅಣ್ಣಾಮಲೈ ಕಿಡಿಕಾರಿದ್ದಾರೆ.
ಡಿಎಂಕೆ ಸರ್ಕಾರದ ಈ ನಿರ್ಲಕ್ಷ್ಯದಿಂದ ಕಲ್ಲಕುರಿಚಿಯಲ್ಲಿ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದು ರಾಜ್ಯಪಾಲ ಆರ್. ಎನ್. ರವಿ ಅವರನ್ನು ಭೇಟಿ ಮಾಡಿ, ಈ ಅಕ್ರಮ ಜಾಲದ ಹಿಂದೆ ಯಾರಿದ್ದಾರೆ ಎಂದು ಪತ್ತೆಹಚ್ಚಲು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಲಾಯಿತು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಇಷ್ಟು ಸಾವು ನೋವು ಸಂಭವಿಸಿದರೂ ಸಚಿವ ಎಸ್.ಮುತ್ತುಸ್ವಾಮಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.