ADVERTISEMENT

ದೆಹಲಿಯಲ್ಲಿ ನಿತ್ಯ 3,800 ಮೆಟ್ರಿಕ್ ಟನ್ ಘನತ್ಯಾಜ್ಯ: ಸುಪ್ರೀಂ ಕೋರ್ಟ್ ಅಸಮಾಧಾನ

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತರಾಟೆಗೆ ತೆಗೆದುಕೊಂಡ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 14 ಮೇ 2024, 2:45 IST
Last Updated 14 ಮೇ 2024, 2:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಭಾರತದ ರಾಜಧಾನಿ ದೆಹಲಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 3,800 ಮೆಟ್ರಿಕ್ ಟನ್‌ನಷ್ಟು ಘನತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ. ಇದು ಸರಿಯಾದ ಬೆಳವಣಿಗೆಯಲ್ಲ’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. 

ದೆಹಲಿಯಲ್ಲಿ ಘನತ್ಯಾಜ್ಯ ಸಂಸ್ಕರಣೆ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.

‘ಘನತ್ಯಾಜ್ಯ ನಿರ್ವಹಣೆ ವಿಚಾರವನ್ನು ರಾಜಕೀಯ ಮೀರಿ ಚಿಂತಿಸಬೇಕು. ಆದರೆ, ಈ ಬಗ್ಗೆ ಯಾರೂ ತಲೆ ಕೆಡೆಸಿಕೊಂಡಂತೆ ಕಾಣುತ್ತಿಲ್ಲ. ಈ ಕುರಿತು ಪೌರಸಂಸ್ಥೆಯ ಉನ್ನತ ಅಧಿಕಾರಿಗೆ ಸಮನ್ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿತು.  

ADVERTISEMENT

ಪ್ರತಿನಿತ್ಯ ಉತ್ಪತ್ತಿಯಾಗುವ 3,800 ಮೆಟ್ರಿಕ್ ಟನ್‌ ತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯದ ಪ್ರಮಾಣ ಮತ್ತಷ್ಟು ಹೆಚ್ಚಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ ಕರೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪೀಠವು ಸಲಹೆ ನೀಡಿತು. 

‘ಇಷ್ಟು ಪ್ರಮಾಣದ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಸೌಲಭ್ಯವನ್ನು ಯಾವಾಗ ಅಭಿವೃದ್ಧಿಪಡಿಸಿಕೊಳ್ಳುವಿರಿ. ತ್ಯಾಜ್ಯದ ನಿರ್ವಹಣೆಯ ಸಾಮರ್ಥ್ಯವಿಲ್ಲದ ಕಾರಣ, ಇಷ್ಟು ಪ್ರಮಾಣದ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿಲ್ಲ ಎಂಬುದು ದಾಖಲೆಗಳು ಹೇಳುತ್ತವೆ. ಈ ಹೇಳಿಕೆ ಸರಿಯಾಗಿದೆಯೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿ. ಈ ಸರಳವಾದ ಪ್ರಶ್ನೆಗೆ ನಿಮ್ಮಿಂದಲೂ ಸರಳವಾದ ಉತ್ತರವನ್ನೇ ನಿರೀಕ್ಷಿಸುತ್ತೇವೆ’ ಎಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಪರ ಹಾಜರಿದ್ದ ಹಿರಿಯ ವಕೀಲರಾದ ಮೇನಕಾ ಗುರುಸ್ವಾಮಿ ಅವರನ್ನು ಪ್ರಶ್ನಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.