ADVERTISEMENT

ಜಮ್ಮು | ಪೂಜಾ ಸ್ಥಳಕ್ಕೆ ಹಾನಿ: ಮತ್ತೆ ಮೂವರ ಬಂಧನ

ಪಿಟಿಐ
Published 1 ಜುಲೈ 2024, 14:43 IST
Last Updated 1 ಜುಲೈ 2024, 14:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ರಿಯಾಸಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪೂಜಾ ಸ್ಥಳವೊಂದನ್ನು ಹಾನಿಗೀಡು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ 15 ಜನರನ್ನು ವಶಕ್ಕೆ ತೆಗೆದುಕೊಂಡಂತಾಗಿದೆ.

ಈ ಪ್ರಕರಣವು ಜಿಲ್ಲೆಯ ಧರ್ಮರಿ ಪ್ರದೇಶದ ಗ್ರಾಮವೊಂದರಲ್ಲಿ ಶನಿವಾರ ಸಂಜೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಕೆಲವೆಡೆ ಪ್ರತಿಭಟನೆಗಳೂ ನಡೆದಿದ್ದವು. 

ADVERTISEMENT

ಸಂಬಂಧಪಟ್ಟ ಸೆಕ್ಷನ್‌ಗಳ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಉಪ ಪೊಲೀಸ್‌ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನೂ ರಚಿಸಲಾಗಿತ್ತು. ಭಾನುವಾರದ ಒಳಗೆ 12 ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಭಾನುವಾರ ಮಧ್ಯರಾತ್ರಿ ಇನ್ನೂ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಬಂದ್‌: ಪ್ರಕರಣ ವಿರೋಧಿಸಿ ಸ್ಥಳೀಯ ಸಂಘಟನೆಯೊಂದು ಸೋಮವಾರ ಬಂದ್‌ಗೆ ಕರೆ ನೀಡಿತ್ತು. ರಿಯಾಸಿ ಪಟ್ಟಣ ಮತ್ತು ಹತ್ತಿರದ ಪ್ರದೇಶಗಳಲ್ಲಿ ಬಂದ್‌ ಆಚರಿಸಲಾಯಿತು. ಕೆಲ ರಸ್ತೆಗಳಲ್ಲಿ ಟಯರ್‌ಗಳನ್ನು ಸುಟ್ಟು ಪ್ರತಿಭಟಿಸಲಾಯಿತು. ಝನಾನಾ ಉದ್ಯಾನದಿಂದ ತಾಪಾ ಚೌಕದವರೆಗೆ ಪ್ರತಿಭಟನಾ ರ‍್ಯಾಲಿಯನ್ನೂ ಹಮ್ಮಿಕೊಳ್ಳಲಾಗಿತ್ತು. 

ಕೋಮುಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿಯನ್ನು ಭಾರಿ ಸಂಖ್ಯೆಯಲ್ಲಿ ನೇಮಿಸಲಾಗಿದೆ. ಶಾಂತಿ ಕಾಪಾಡಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದೇವೆ. ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಗಳು ತಿಳಿಸಿದ್ದಾರೆ. 

ತಪ್ಪಿತಸ್ಥರ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್‌ಎ) ಅಡಿ ಪ್ರಕರಣ ದಾಖಲಿಸಲಾಗುವುದು. ಮುಂದಿನ ದಿನಗಳಲ್ಲಿ ಇಂಥ ದಾಳಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಎಲ್ಲಾ ದೇವಾಲಯಗಳಲ್ಲೂ ಸಿ.ಸಿ.ಟಿ.ವಿ. ಕ್ಯಾಮರಾಗಳನ್ನು ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.